Publish Date: Sun, 23 Dec 2018 (17:19 IST)
Updated Date: Sun, 23 Dec 2018 (17:20 IST)
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತಪ್ಪಿದ ಹಾಗೂ ಸ್ಥಾನದಿಂದ ಕೈಬಿಟ್ಟವರು ತಮ್ಮ ಮುಂದಿನ ನಡೆ ಕುರಿತು ಚಿಂತನೆ ಮಂಥನದಲ್ಲಿ ತೊಡಗಿದ್ದಾರೆ.
ರಾಜ್ಯ ಸರಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಸಿಗದಿರುವ ಅತೃಪ್ತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರದಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಅತೃಪ್ತ ಶಾಸಕರ ಬಣದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಇಂದು ಅಥವಾ ನಾಳೆ ಎಲ್ಲ ಅತೃಪ್ತ ಶಾಸಕರು ಸಭೆ ಸೇರಿ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ. ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ಸಿಗದಿರಲು ಕಾರಣಗಳು ಏನು? ಎಂಬ ಬಗ್ಗೆ ವಿವರಣೆ ಪಡೆಯಲು ತೀರ್ಮಾನಿಸಿದ್ದಾರೆ.
ಅತೃಪ್ತ ಶಾಸಕರು ಸಭೆ ಸೇರಿ ಮುಂದೆ ಕೈಗೊಳ್ಳಬೇಕಾದ ರೂಪು-ರೇಷೆಗಳ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.