ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕರಾದ ಸುರೇಶ್ ಬಾಬು, ಆನಂದ್ ಸಿಂಗ್ ಮತ್ತು ಮಾಜಿ ಸಚಿವ ಜನಾರ್ಧನರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ಬೆಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಕಂಪ್ಲಿ ಶಾಸಕ ಸುರೇಶ್ ಬಾಬು, ಹೊಸಪೇಟೆ ಶಾಸಕ ಆನಂದ್ ಸಿಂಗ್ ಮತ್ತು ಮಾಜಿ ಸಚಿವ ಜನಾರ್ಧನ್ ರೆಡ್ಡಿ ಹಾಗೂ ಅವರ 5 ಮಂದಿ ಸಹಚರರು, 6 ಮಂದಿ ಸರ್ಕಾರಿ ಅಧಿಕಾರಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ದೊರೆತಿದ್ದರೂ ಮತ್ತೆರಡು ಪ್ರಕರಣಗಳಲ್ಲಿ ಜಾಮೀನು ಸಿಗದ ಕಾರಣ ಬಿಡುಗಡೆ ಭಾಗ್ಯ ಒಲಿದು ಬಂದಿಲ್ಲ.
ಇನ್ನು ಕಂಪ್ಲಿ ಶಾಸಕ ಸುರೇಶ್ ಬಾಬು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರಿಗೆ 10 ಲಕ್ಷ ಮೊತ್ತದ ಬಾಂಡ್ ನೀಡುವ ಜೊತೆಗೆ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಒದಗಿಸುವಂತೆ ಸೂಚಿಸಿರುವ ಕೋರ್ಟ್, ಸಾಕ್ಷ್ಯಗಳನ್ನು ನಾಶಪಡಿಸದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.