ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಈಗಾಗಲೇ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇದೀಗ ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು.
ಈ ಆರೋಪದ ಬೆನ್ನಲ್ಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ಅವರು ತರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.