Publish Date: Tue, 18 Jun 2024 (11:01 IST)
Updated Date: Tue, 18 Jun 2024 (11:04 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ಈಗ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಜ್ವಲ್ ರೇವಣ್ಣರಿಂದ ದೌರ್ಜನ್ಯಕ್ಕೊಳಗಾಗಿದ್ದ ಮಹಿಳೆಯನ್ನು ಎಚ್ ಡಿ ರೇವಣ್ಣ ದಂಪತಿಯ ನಿರ್ದೇಶನದ ಮೇರೆಗೆ ಭವಾನಿ ರೇವಣ್ಣ ಸಂಬಂಧಿಯೇ ಅಪಹರಣ ಮಾಡಿ ಕೂಡಿ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಎಸ್ ಐಟಿ ಪಡೆ ಈಗಾಗಲೇ ರೇವಣ್ಣರನ್ನು ಬಂಧಿಸಿತ್ತು. ನ್ಯಾಯಾಂಗ ಬಂಧನದ ಬಳಿಕ ರೇವಣ್ಣ ಜಾಮೀನಿನ ಮೇಎಲೆ ಬಿಡುಗಡೆಯಾಗಿದ್ದರು.
ಇದರ ನಡುವೆಯೇ ಭವಾನಿ ರೇವಣ್ಣಗೂ ವಿಚಾರಣೆಗೆ ಹಾಜರಾಗಲು ಎಸ್ ಐಟಿ ನೋಟಿಸ್ ನೀಡಿತ್ತು. ಆದರೆ ಆರೋಗ್ಯದ ನೆಪ ನೀಡಿ ಅವರು ತಪ್ಪಿಸಿಕೊಂಡಿದ್ದರು. ಬಳಿಕ ಭವಾನಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಎಸ್ ಐಟಿ ತನಿಖೆ ವೇಳೆ ಭವಾನಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಹೀಗಾಗಿ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಭವಾನಿ ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಪುತ್ರ ಪ್ರಜ್ವಲ್ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.