Publish Date: Mon, 30 Mar 2026 (14:22 IST)
Updated Date: Mon, 30 Mar 2026 (14:25 IST)
ಬಾಗಲಕೋಟೆ: ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪ್ರಚಾರ ಶುರು ಮಾಡಿದೆ. ಇಂದು ಬಾಗಲಕೋಟೆಯಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸಿದೆ.
ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಿಗೆ ಏಪ್ರಿಲ್ 10 ರಂದು ಉಪ ಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದೊಳಗಿನ ಅಸಮಾಧಾನಕ್ಕೆ ತಾತ್ಕಾಲಿಕ ಮದ್ದು ಅರೆದು ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇಂದು ಬಾಗಲಕೋಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರಚಾರ ನಡೆಸಲಾಗಿದೆ. ಪಾದಯಾತ್ರೆ ಮೂಲಕ ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ ಮತ ಯಾಚನೆ ನಡೆಸಿದ್ದಾರೆ.
ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತ ಯಾಚಿಸಿದರು. ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ, ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ, ಜಿಲ್ಲಾಧ್ಯಕ್ಷ ಶಾಂತಗೌಡ, ಶಾಸಕ ಬಸವರಾಜ ಮತ್ತಿಮೂಡ್, ಪಕ್ಷದ ಪ್ರಮುಖ ಪಿ.ಎಚ್.ಪೂಜಾರ್, ಹಲವಾರು ಮುಖಂಡರು, ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.