Publish Date: Sat, 14 Aug 2021 (10:26 IST)
Updated Date: Sat, 14 Aug 2021 (10:30 IST)
ಬೆಂಗಳೂರು (ಆ.14): ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಬಿಜೆಪಿ ನಾಯಕರಿಗೆ ಇಲ್ಲ. ಇದ್ದಿದ್ದರೆ ದೇಶಕ್ಕಾಗಿ ಪ್ರಾಣ ತೆತ್ತವರ ಬಗ್ಗೆ ಹಗುರವಾಗಿ ಮಾತನಾಡುತ್ತಿರಲಿಲ್ಲ. ಈ ಬಿಜೆಪಿಯವರು ಇತಿಹಾಸ ತಿರುಚುವುದರಲ್ಲಿ, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುವುದರಲ್ಲಿ ಪ್ರವೀಣರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಂದಿರಾ ಗಾಂಧಿ ಕುರಿತ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ರವಿಗೆ ಇತಿಹಾಸದ ಜ್ಞಾನ ಇಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ಬಾಯಿ ತೆಗೆದರೆ ಹೊಲಸು ಮಾತನಾಡುತ್ತಾರೆ. ಇದೇನಾ ಬಿಜೆಪಿಯವರ ಸಂಸ್ಕಾರ, ಸಂಸ್ಕೃತಿ? ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ, ಬಲಿದಾನಗೈದ ಇತಿಹಾಸ ಇರುವುದು ಕೇವಲ ಕಾಂಗ್ರೆಸ್ಗೆ ಮಾತ್ರ. ಈ ಆರ್ಎಸ್ಎಸ್ ಹಾಗೂ ಬಿಜೆಪಿಯ ಹಿಂದಿನ ತಲೆಮಾರಿನವರು ಮೊಘಲರು ಹಾಗೂ ಬ್ರಿಟಿಷರ ಆಸ್ಥಾನದಲ್ಲಿ ಪ್ರಮುಖ ಹುದ್ದೆಯಲ್ಲಿದ್ದವರು ಎಂದು ವ್ಯಂಗ್ಯವಾಡಿದರು.
ಈ ಆರ್ಎಸ್ಎಸ್ನವರು ಟಿಪ್ಪು ಸುಲ್ತಾನನನ್ನು ದ್ವೇಷಿಸುತ್ತಾರೆ. ಆದರೆ, ಟಿಪ್ಪುವಿನ ಆಸ್ಥಾನದಲ್ಲಿ ದಿವಾನರಾಗಿದ್ದವರು ಪೂರ್ಣಯ್ಯ, ಹಣಕಾಸು ಸಚಿವ ಕೃಷ್ಣಸ್ವಾಮಿಯವರು. ಇವರನ್ನು ಏಕೆ ಏಕೆ ವಿರೋಧ ಮಾಡುವುದಿಲ್ಲ ಎಂದು ಪ್ರಶ್ನಿಸಿದರು.