Publish Date: Thu, 06 Jan 2022 (16:48 IST)
Updated Date: Thu, 06 Jan 2022 (18:18 IST)
ಸಾರ್ವಜನಿಕ ವಲಯ ಮತ್ತು ಸ್ವಪಕ್ಷದಲ್ಲೇ ತೀವ್ರ ವಿರೋಧ ವ್ಯಕ್ತವಾದ ಕಾರಣ ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯಾದ್ಯಂತ ತೆಗೆದುಕೊಂಡಿರುವ ಕಠಿಣ ನಿಯಮಗಳನ್ನು ಪುನರ್ ಪರಿಶೀಲಿಸಲು ಮುಂದಾಗಿದೆ.
ಜ.15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ನಿಯಮಗಳನ್ನು ಸಡಿಲಗೊಳಿಸುವ ಬಗ್ಗೆ ತೀರ್ಮಾನಿಸಲಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ನಿಯಮಗಳನ್ನು ರಾಜ್ಯಾದ್ಯಂತ ಜಾರಿ ಮಾಡಿರುವುದಕ್ಕೆ ಸಂಪುಟದ ಅನೇಕ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ 15ರಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಿಎಂ ಚರ್ಚೆ ನಡೆಸಿದ ಬಳಿಕ ಪಾಸಿಟಿವಿಟ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಾಲಿ ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಬೆಂಗಳೂರು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜಧಾನಿಯಲ್ಲೇ ಶೇ.80ರಷ್ಟು ದೈನಂದಿನ ಪ್ರಕರಣಗಳು ದಾಖಲಾಗುತ್ತಿವೆ. ಬೇರೆ ಜಿಲ್ಲೆಗಳಿಗೂ ಈ ಮಾರ್ಗಸೂಚಿಯನ್ನು ಅಳವಡಿಸುವುದು ಬೇಡ ಎಂದು ಹೇಳಿದ್ದಾರೆ.
ಜ.15ರಂದು ಮತ್ತೊಮ್ಮೆ ಕೋವಿಡ್ ಸಭೆ ಕರೆಯಲಾಗುವುದು. ಅಲ್ಲಿಯವರೆಗೆ ಎಷ್ಟು ಪ್ರಕರಣಗಳು ಬರುತ್ತವೆ ಎಂದು ನೋಡಿಕೊಂಡು ಸರ್ಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.