Publish Date: Wed, 07 Feb 2024 (12:26 IST)
Updated Date: Wed, 07 Feb 2024 (12:33 IST)
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂಥರ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಂಸದರೂ ಭಾಗಿಯಾಗಿದ್ದಾರೆ. ನಮ್ಮ ತೆರಿಗೆಯನ್ನು ನಮಗೇ ಕೊಡದೇ ಉತ್ತರ ಭಾರತೀಯರಿಗೆ ಹಂಚುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಬಿಜೆಪಿ ಪ್ರತಿಭಟನೆಯ ತಿರುಗೇಟು
ಅತ್ತ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡ ಜೆಡಿಎಸ್
ಒಂದೆಡೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಮೈತ್ರಿ ಪಕ್ಷ ಜೆಡಿಎಸ್ ಮಾತ್ರ ಈ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದೆ. ಜೆಡಿಎಸ್ ನಾಯಕ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಹೀಗಾಗಿ ಬಿಜೆಪಿಗೆ ಕೊಂಚ ಇರಿಸುಮುರಿಸಾಗಿರುವುದು ನಿಜ.