ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಕುಡಿಯುವ ನೀರು ಪೂರೈಕೆ ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಿರುವುದರ ವಿರುದ್ಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಏ.18ರ ಕರ್ನಾಟಕ ಬಂದ್ ಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಶಾಂತಿಯುತ ಬಂದ್ಗೆ ನಮ್ಮ ಬೆಂಬಲವಿದೆ. ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲು ನಿರ್ಧರಿಸಿದೆ. ಆದರೆ ನಾವೂ ಕೂಡ ಈ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ವಿವರಿಸೋಣ. ಇದಕ್ಕೆ ಎಲ್ಲ ರೀತಿಯ ನೆರವನ್ನು ಬಿಜೆಪಿ ನೀಡಲಿದೆ ಎಂದರು.
ನಡಹಳ್ಳಿ ನಿಲುವಿಗೆ ಬಿಜೆಪಿ ಬೆಂಬಲ : ಗೋವಾದ ಬೈನಾ ಬೀಚ್ನಲ್ಲಿ ತೆರವಾಗಲಿರುವ ಕನ್ನಡಿಗರ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನಹರಿಸಿ ಅಗತ್ಯವಾದ ಎಲ್ಲ ರೀತಿಯ ನೆರವು ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ನೆರವು ಪಡೆಯಬೇಕು ಎಂದು ಆಗ್ರಹಿಸಿದ ಈಶ್ವರಪ್ಪ, ಗೋವಾ ಕನ್ನಡಿಗರ ರಕ್ಷಣೆ ವಿಷಯದಲ್ಲಿ ಮಾತ್ರ ಕಾಂಗ್ರೆಸ್ ಶಾಸಕ ನಡಹಳ್ಳಿಯವರ ನಿಲುವನ್ನು ಬೆಂಬಲಿಸುವುದಾಗಿ ತಿಳಿಸಿದರು.
ಮರಳು ಸಮಸ್ಯೆಗೆ 15 ದಿನಗಳ ಗಡುವು: ರಾಜ್ಯದಲ್ಲಿ ಗಂಭೀರವಾಗಿರುವ ಮರಳು ಸಮಸ್ಯೆಯನ್ನು ಬಗೆಹರಿಸಲು 15 ದಿಗಳ ಗಡುವು ನೀಡಿರುವ ಬಿಜೆಪಿಯು, ಈ ಸಂಬಂಧ ಸಿಎಂ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು.
ಈ ಕುರಿತು ಸಂಬಂಧ ವಿಶೇಷ ಸಭೆ ಕರೆಯುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿಯವರಲ್ಲಿ ಮನವಿ ಮಾಡಿರುವುದಾಗಿ ಈಶ್ವರಪ್ಪ ಹೇಳಿದ್ದಾರೆ.