Publish Date: Mon, 22 Apr 2024 (11:39 IST)
Updated Date: Mon, 22 Apr 2024 (11:49 IST)
ಬೆಂಗಳೂರು: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆಯನ್ನು ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ತಿಳಿಸಿದ್ದಾರೆ.
ಈ ಹೇಯ, ಅನಾಗರಿಕ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ. ಇದನ್ನು ಖಂಡಿಸಿ ನಾಳೆ (ಏ.23) ಸಂಜೆ 6 ಗಂಟೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ವತಿಯಿಂದ ಮೊಂಬತ್ತಿ (ಕ್ಯಾಂಡಲ್) ಹಚ್ಚಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮೇಲಿನ ದೌರ್ಜನ್ಯ ದಿನೇದಿನೇ ಹೆಚ್ಚುತ್ತಿದೆ. ಸರಕಾರದ ಮುಖ್ಯಸ್ಥರು ಮತ್ತು ಸಚಿವರು ತನಿಖೆಗೂ ಮೊದಲೇ ಕ್ಷುಲ್ಲಕ ಹೇಳಿಕೆ ಕೊಟ್ಟು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದು, ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣ ನಡೆದಾಗಲೂ ಇವುಗಳ ಕುರಿತು ಸರಕಾರವು ತಪ್ಪು ಮಾಹಿತಿ ನೀಡಿತ್ತು ಎಂದು ಅವರು ಆಕ್ಷೇಪಿಸಿದ್ದಾರೆ. ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ ಘಟನೆಯೂ ನಡೆದಿದೆ ಎಂದು ವಿವರಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಮಕ್ಕಳು ಸುರಕ್ಷಿತರಲ್ಲ ಎಂಬ ವಾತಾವರಣ ನಿರ್ಮಾಣವಾಗುತ್ತಿದೆ. ರಾಜ್ಯ ಸರಕಾರವು ಕೂಡಲೇ ಪೊಲೀಸ್ ಇಲಾಖೆ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಸರಕಾರದ ಸಚಿವರು ತನಿಖೆಯ ದಾರಿ ತಪ್ಪಿಸುವಂತೆ ಹೇಳಿಕೆ ನೀಡಬಾರದು ಎಂದೂ ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣ ನೀತಿಯಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.