Publish Date: Sun, 28 Apr 2019 (18:31 IST)
Updated Date: Sun, 28 Apr 2019 (18:35 IST)
ಪಕ್ಕದ ಶ್ರೀಲಂಕಾದ ಕೊಲಂಬೋನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳ, ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲೀಗ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ವ್ಯಾಪಕ ಬಂದೋ ಬಸ್ತ್ ಮಾಡಲಾಗಿದೆ. ಶ್ವಾನ ದಳ ಮತ್ತು ಬಾಂಬ್ ತಪಾಸಣಾ ದಳ ಜಿಲ್ಲೆಯ ಜನ ಸಂದಣಿ ಪ್ರದೇಶಗಳಾದ, ಬಸ್ ನಿಲ್ದಾಣ, ರೈಲು ನಿಲ್ದಾಣ, ಜಿಲ್ಲಾಡಳಿತ ಭವನ, ಜಿಲ್ಲಾ ನ್ಯಾಯಾಲಯದ ಸಂಕೀರ್ಣ, ಪ್ರಮುಖ ಚರ್ಚ್, ಮಂದಿರಗಳನ್ನ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ನಡೆಸಿತು.
ಇತ್ತೀಚೆಗಷ್ಟೆ ಕೇರಳದ ವೈನಾಡು ಮತ್ತು ಪಕ್ಕದ ಕೊಡಗು ಜಿಲ್ಲೆಗಳಲ್ಲಿ ನಕ್ಸಲ್ ಚಟುವಟಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಗಡಿ ಪ್ರದೇಶಗಳತ್ತ ಹೆಚ್ಚಿನ ಗಮನ ನೀಡಲಾಗಿದೆ.
ಕೇರಳ ರಾಜ್ಯದ ಗಡಿಯನ್ನ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.