Publish Date: Thu, 30 Apr 2026 (16:59 IST)
Updated Date: Thu, 30 Apr 2026 (17:02 IST)
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಭೀಕರ ರಸ್ತೆ ಗೋಡೆ ಕುಸಿತದಲ್ಲಿ 7ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆಂದು ಮಾಹಿತಿ ಲಭಿಸಿದೆ.
ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಸಂಬಂಧ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸಿಎಂ ಆದೇಶಿಸಿದ್ದಾರೆ.
ನಿನ್ನೆ (ಏ.29) ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಬಳಿಕ ಬೌರಿಂಗ್ ಆಸ್ಪತ್ರೆಗೆ ತೆರಳಿ ಗಾಯಾಳುಗಳು ಆರೋಗ್ಯ ವಿಚಾರಿಸಿದ ಸಿಎಂ ಉಚಿತ ಚಿಕಿತ್ಸೆ ನೀಡುವಂತೆ ಹೇಳಿದ್ದಾರೆ.