Publish Date: Thu, 22 Feb 2024 (11:21 IST)
Updated Date: Thu, 22 Feb 2024 (11:25 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಸಿಎಂ ಸಿದ್ದರಾಮಯ್ಯಗೆ ಲಂಚ ಪ್ರಕರಣವೊಂದು ಸುತ್ತಿಕೊಳ್ಳುತ್ತಿದೆ.
ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಲಾಗಿದ್ದು ಬಿ ರಿಪೋರ್ಟ್ ನ್ನು ಜನಪ್ರತಿನಿಧಿಗಳ ನ್ಯಾಯಾಲ ತಿರಸ್ಕರಿಸಿದೆ. ಮರು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ.
ಹುದ್ದೆಯೊಂದಕ್ಕೆ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಲಂಚ ಪಡೆದಿದ್ದರು ಎಂದು ಬಿಜೆಪಿ ನಾಯಕ ಎನ್ ಆರ್ ರಮೇಶ್ ದೂರು ನೀಡಿದ್ದರು. 2013-18 ರ ಅವಧಿಯಲ್ಲಿ ಅಧಿಕಾರದಲ್ಲಿದ್ದಾಗ ಎಲ್ ವಿವೇಕಾನಂದ ಎಂಬವರಿಂದ 1.30 ಕೋಟಿ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಲಂಚ ಪಡೆದು ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆದು ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು, ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಪುರಾವೆ ಇಲ್ಲ ಎಂದು ವರದಿ ನೀಡಲಾಗಿತ್ತು. ಆದರೆ ಈ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಆ ಮೂಲಕ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿ ಸಿಎಂ ವಿರುದ್ಧ ಮತ್ತೊಂದು ಟೀಕಾಸ್ತ್ರ ಸಿಕ್ಕಂತಾಗಿದೆ.