Publish Date: Sat, 05 Sep 2026 (11:25 IST)
Updated Date: Sat, 05 Sep 2026 (11:29 IST)
ಕಾರಟಗಿ, ಸೆ. 5: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಜನಾಂದೋಲನವಾಗಿ ಪರಿವರ್ತನೆಯಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಪಾದಯಾತ್ರೆಗೂ ಮುನ್ನ ಕಾರಟಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
“ನಮ್ಮ ಹೋರಾಟದ ಪರಿಣಾಮವಾಗಿಯೇ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಬರ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಜೀವನದಲ್ಲಿ ಮೊದಲ ಬಾರಿಗೆ ಹಸಿರು ಶಾಲು ಹಾಕಿಕೊಂಡು ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಂದ ದೊಡ್ಡ ಜಯ,” ಎಂದು ವಿಜಯೇಂದ್ರ ಹೇಳಿದರು.
ಮುಖ್ಯಮಂತ್ರಿಗಳು ತಮಗೆ ನೀಡಿರುವ ಎಚ್ಚರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡುವಂತೆ ನನಗೆ ವಾರ್ನಿಂಗ್ ನೀಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿಲ್ಲ. ರೈತರ ಸಂಕಷ್ಟವನ್ನು ನೋಡಿ ನೋವಿನಿಂದ ಮಾತನಾಡಿದ್ದೇನೆ. ಮುಖ್ಯಮಂತ್ರಿ ಹಾಗೂ ಅವರ ಸ್ಥಾನಕ್ಕೆ ಗೌರವ ಕಳೆಯುವಂತೆ ಯಾವುದೇ ಹೇಳಿಕೆ ನೀಡಿಲ್ಲ,” ಎಂದರು.
“ಕಾಂಗ್ರೆಸ್ ಸರ್ಕಾರ ಜನಪ್ರಿಯ ಸರ್ಕಾರವಲ್ಲ, ಜಾಹೀರಾತು ಸರ್ಕಾರವಾಗಿದೆ. ಜಾಹೀರಾತು ನೀಡುವುದನ್ನು ಬಿಟ್ಟರೆ ಸರ್ಕಾರದಿಂದ ಬೇರೇನೂ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯ ₹5,000 ಕೋಟಿ ಅಕ್ರಮದ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಈವರೆಗೆ ಸ್ಪಷ್ಟನೆ ನೀಡಿಲ್ಲ. ಈ ವಿಚಾರವನ್ನು ಸಿಎಜಿ ವರದಿಯಲ್ಲೂ ಉಲ್ಲೇಖಿಸಲಾಗಿದೆ,” ಎಂದು ಆರೋಪಿಸಿದರು.
“ಗ್ಯಾರಂಟಿ ಜಾರಿ ಸಮಿತಿಯ ಸದಸ್ಯರು ಏನು ಮಾಡುತ್ತಿದ್ದಾರೆ? ₹5,000 ಕೋಟಿ ಫಲಾನುಭವಿಗಳಿಗೆ ತಲುಪಿಲ್ಲ ಎನ್ನುವ ಆರೋಪಗಳಿದ್ದರೂ ಸಮಿತಿ ಏಕೆ ಕ್ರಮ ಕೈಗೊಂಡಿಲ್ಲ? ಶಕ್ತಿ ಯೋಜನೆಯೂ ಗ್ರಾಮೀಣ ಭಾಗದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ. ಬಸ್ಗಳೇ ಇಲ್ಲದೆ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಡುತ್ತಿದ್ದಾರೆ. ಯಡಿಯೂರಪ್ಪ ಅವರು ನೀಡಿದ್ದ ಸೈಕಲ್ ಯೋಜನೆಯನ್ನೂ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ,” ಎಂದು ವಿಜಯೇಂದ್ರ ಟೀಕಿಸಿದರು.
ಉತ್ತರ ಕರ್ನಾಟಕಕ್ಕೆ ಉದ್ಯೋಗ, ಕೈಗಾರಿಕೆ ನೀಡಿ
ಉತ್ತರ ಕರ್ನಾಟಕಕ್ಕೆ ದೊಡ್ಡ ಕೈಗಾರಿಕೆಗಳನ್ನು ತರಬೇಕು. ಅದು ಸಾಧ್ಯವಾಗದಿದ್ದರೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಶಿಕ್ಷಕರ ನೇಮಕಾತಿ ಮಾಡಬೇಕು. “ಶಾಲೆಗಳಿವೆ, ಆದರೆ ಶಿಕ್ಷಕರಿಲ್ಲ. ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿ, ಕೇಂದ್ರದ ಐದು ಕೆಜಿ ಅಕ್ಕಿಯನ್ನೇ ನೀಡಲಾಗುತ್ತಿದೆ. ರಾಜ್ಯದ ಪಾಲಿನ ಅಕ್ಕಿ ನೀಡುತ್ತಿಲ್ಲ. ಬಿಪಿಎಲ್ ಕಾರ್ಡ್ಗಳನ್ನು ಕಡಿತಗೊಳಿಸುವ ಮೂಲಕ ಬಡವರಿಗೆ ಅನ್ಯಾಯ ಮಾಡಲಾಗಿದೆ,” ಎಂದು ಆರೋಪಿಸಿದರು.
ಗ್ಯಾರಂಟಿಗಳಿಗಾಗಿ ರಾಜ್ಯವನ್ನು ಕುಡುಕರ ರಾಜ್ಯ ಮಾಡಲಾಗಿದೆ
“ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಮದ್ಯದ ಅಂಗಡಿಗಳನ್ನು ಹೆಚ್ಚಿಸಲಾಗಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಎಸ್ಸಿಎಸ್ಪಿ-ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಮೂರು ವರ್ಷ ರಾಜ್ಯವನ್ನು ಹಾಳು ಮಾಡಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಇದು ಬಡವರು ಮತ್ತು ರೈತ ವಿರೋಧಿ ಸರ್ಕಾರ,” ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಆಡಳಿತ ಪಕ್ಷದ ಶಾಸಕರೇ “ಸರ್ಕಾರ ಟೇಕಾಫ್ ಆಗಿಲ್ಲ” ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವಾಗ ರೈತರನ್ನು ಸರ್ಕಾರ ಕೈಬಿಡಬಾರದು. ಮೊದಲು ರಾಜ್ಯ ಸರ್ಕಾರವೇ ರೈತರಿಗೆ ಅಗತ್ಯ ಪರಿಹಾರ ನೀಡಬೇಕು. ಬಳಿಕ ಕೇಂದ್ರ ಸರ್ಕಾರದಿಂದ ಏನು ನೆರವು ಬೇಕೋ ಅದನ್ನು ಪಡೆಯಬಹುದು. ಕಾಂಗ್ರೆಸ್ ಬಲಿಷ್ಠ ಸರ್ಕಾರವಲ್ಲ ಎಂದು ಅವರು ಹೇಳಿದರು.
ಸ್ವನಿಧಿ ಯೋಜನೆಯಡಿ ಬದುಕು ಕಟ್ಟಿಕೊಂಡ ನಿಂಗಮ್ಮಗೆ ಅನ್ಯಾಯ
ಸ್ವನಿಧಿ ಯೋಜನೆಯಡಿ ಸಣ್ಣ ಉದ್ಯಮ ನಡೆಸುತ್ತಿದ್ದ ನಿಂಗಮ್ಮ ಅವರ ಇಡ್ಲಿ ಅಂಗಡಿ ತೆರವುಗೊಳಿಸಿರುವ ಕ್ರಮವನ್ನೂ ವಿಜಯೇಂದ್ರ ಖಂಡಿಸಿದರು.
“ಬೆಂಗಳೂರಿನ ಇಡ್ಲಿ ನಿಂಗಮ್ಮ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೆಚ್ಚಿಕೊಂಡಿದ್ದರು. ಆದರೆ ರಾಜ್ಯ ಸರ್ಕಾರ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕೆಲಸ ಮಾಡುತ್ತಿದೆ. ಸಮಾಜದ ಎಲ್ಲ ವರ್ಗದವರೂ ಬೀದಿ ಬದಿ ವ್ಯಾಪಾರವನ್ನು ಅವಲಂಬಿಸಿದ್ದಾರೆ. ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಅವರನ್ನು ತೆರವುಗೊಳಿಸುವ ಮೂಲಕ ಸರ್ಕಾರ ಖೆಡ್ಡಾ ತೋಡಿದೆ,” ಎಂದು ಆರೋಪಿಸಿದರು.
ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಅದರ ಮೂಲಕ ಬದುಕು ಕಟ್ಟಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ಮತ್ತೆ ಬೀದಿಗೆ ತಳ್ಳಬಾರದು. ಮೊದಲು ಅವರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನಂತರ ಯಾವುದೇ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ