Select Your Language

Notifications

webdunia
webdunia
webdunia
webdunia

ಹನೂರು ಶೂಟೌಟ್ ಪ್ರಕರಣದಲ್ಲಿ ಹಲವು ಅನುಮಾನಗಳಿವೆ: ಬಿವೈ ವಿಜಯೇಂದ್ರ

BY Vijayendra
ಬೆಂಗಳೂರು, ವಿಧಾನಸೌಧ: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯಲ್ಲಿ ನಡೆದಿರುವ ಅರಣ್ಯ ಶೂಟೌಟ್ ಪ್ರಕರಣ ದಿನದಿಂದ ದಿನಕ್ಕೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದ್ದು, ಪ್ರಕರಣದ ಸತ್ಯಾಂಶವನ್ನು ರಾಜ್ಯ ಸರ್ಕಾರ ಮರೆಮಾಚುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
 
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯ ಸತ್ಯಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಬಿಜೆಪಿ ವತಿಯಿಂದ ಈಗಾಗಲೇ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸಮಿತಿ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿರುವ ಬೆನ್ನಲ್ಲೇ ಪ್ರಕರಣದ ಕುರಿತು ಮತ್ತಷ್ಟು ಗಂಭೀರ ಪ್ರಶ್ನೆಗಳು ಮತ್ತು ಅನುಮಾನಗಳು ಉದ್ಭವಿಸಿವೆ ಎಂದು ಹೇಳಿದರು.
 
ಹನೂರು ಪ್ರಕರಣದಲ್ಲಿ ಆತುರಾತುರವಾಗಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಇಷ್ಟಾದರೂ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಸಾರ್ವಜನಿಕವಾಗಿಲ್ಲ. ವರದಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
 
“ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಚ್ಚಿಡುವ ಅಗತ್ಯವೇನು? ವರದಿಯಲ್ಲಿ ಏನಿದೆ ಎಂಬುದನ್ನು ಜನರಿಗೆ ತಿಳಿಸಬೇಕಲ್ಲವೇ? ವರದಿಯನ್ನು ಬಿಡುಗಡೆ ಮಾಡದಿರುವುದೇ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದು ಅವರು ಪ್ರಶ್ನಿಸಿದರು.
 
ಪತ್ರಿಕಾಗೋಷ್ಠಿಯಲ್ಲಿ ಘಟನೆಯ ಫೋಟೋಗಳನ್ನು ಪ್ರದರ್ಶಿಸಿದ ವಿಜಯೇಂದ್ರ, ಮೃತ ವ್ಯಕ್ತಿಯ ಭುಜದ ಭಾಗದಲ್ಲಿ ಗನ್ ಇಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವಂತೆ ಫೋಟೋಗಳಲ್ಲಿ ಕಾಣಿಸುತ್ತಿದೆ ಎಂದು ಆರೋಪಿಸಿದರು. ಅದೇ ರೀತಿ, ಕತ್ತಿನ ಹಿಂಭಾಗದಲ್ಲಿ ಕೂಡ ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವ ಗುರುತುಗಳಿರುವ ಬಗ್ಗೆ ಅವರು ಪ್ರಶ್ನೆ ಎತ್ತಿದರು.
 
“ತಜ್ಞರ ಅಭಿಪ್ರಾಯದ ಪ್ರಕಾರ ಇದು ದೂರದಿಂದ, ಅಂದರೆ ಲಾಂಗ್ ರೇಂಜ್‌ನಿಂದ ಗುಂಡು ಹಾರಿಸಿದ ಪ್ರಕರಣದಂತೆ ಕಾಣುವುದಿಲ್ಲ. ಸಮೀಪದಿಂದ ಗುಂಡು ಹಾರಿಸಿರುವ ಸಾಧ್ಯತೆಗಳಿವೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕೂಡ ಈ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಇದೆ. ಹಾಗಿದ್ದರೆ ಆ ವರದಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ?” ಎಂದು ವಿಜಯೇಂದ್ರ ಪ್ರಶ್ನಿಸಿದರು.
 
ಈ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ, ಇದು ಸಾಮಾನ್ಯ ಎನ್‌ಕೌಂಟರ್ ಪ್ರಕರಣವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಹೇಳಿದರು. ಎನ್‌ಕೌಂಟರ್‌ನಲ್ಲಿ ಮೃತಪಟ್ಟವರು ಯಾವುದೇ ಹ್ಯಾಬಿಚ್ಯುಯಲ್ ಅಪೆಂಡರ್‌ಗಳು ಅಥವಾ ನಿರಂತರವಾಗಿ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದವರು ಅಲ್ಲ ಎಂದು ವಿಜಯೇಂದ್ರ ಹೇಳಿದರು. ಕಾಡಿಗೆ ತೆರಳಿದ್ದ ಮಹಿಮಾದಾಸ್ ಎಂಬ ವ್ಯಕ್ತಿ ಎಲ್ಲಿದ್ದಾರೆ ಎಂಬುದನ್ನೂ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.
 
“ಮಹಿಮಾದಾಸ್ ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿರಬಹುದು. ಆದರೆ ಅವರನ್ನು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಬಚ್ಚಿಡುವ ಪ್ರಯತ್ನ ಮಾಡುತ್ತಿವೆಯೇ ಎಂಬ ಅನುಮಾನ ಮೂಡಿದೆ. ಅವರು ಎಲ್ಲಿದ್ದಾರೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು” ಎಂದು ವಿಜಯೇಂದ್ರ ಹೇಳಿದರು. ಸ್ಥಳೀಯ ಸಂಸದ ಸುನೀಲ್ ಬೋಸ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ತಪ್ಪಾಗಿದೆ ಎಂದು ಹೇಳಿರುವುದಾಗಿ ವಿಜಯೇಂದ್ರ ಉಲ್ಲೇಖಿಸಿದರು.
 
ಅದೇ ರೀತಿ, ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅವರೂ ಆರಂಭದಲ್ಲಿ ತಪ್ಪಾಗಿದೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಆದರೆ ನಂತರ ವಿಧಾನಸಭೆಯಲ್ಲಿ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
 
“ಮೊದಲು ತಪ್ಪಾಗಿದೆ ಎಂದು ಹೇಳಿ, ನಂತರ ಸದನದಲ್ಲಿ ತಮ್ಮ ಹೇಳಿಕೆಯನ್ನು ಬದಲಾಯಿಸುವ ಅಗತ್ಯ ಏನು? ಈ ರೀತಿಯ ಬೆಳವಣಿಗೆಗಳು ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕುತ್ತವೆ” ಎಂದು ಅವರು ಹೇಳಿದರು.
 
ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಯಾವುದಾದರೂ ಅಕ್ರಮ ನಡೆಯುತ್ತಿತ್ತೇ? ಆ ಅಕ್ರಮದ ಬಗ್ಗೆ ಎನ್‌ಕೌಂಟರ್‌ಗೆ ಗುರಿಯಾದವರಿಗೆ ಮಾಹಿತಿ ಇತ್ತೇ? ಆ ಕಾರಣಕ್ಕಾಗಿಯೇ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
 
“ಇದು ಕೇವಲ ಎನ್‌ಕೌಂಟರ್ ಪ್ರಕರಣವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಉದ್ದೇಶವಿದೆಯೇ? ಇದು ಸರ್ಕಾರದ ಪ್ರಾಯೋಜಿತ ಕೊಲೆಯೇ ಎಂಬ ಅನುಮಾನಗಳೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ಇಂತಹ ಗಂಭೀರ ಆರೋಪಗಳಿಗೆ ಸರ್ಕಾರ ಉತ್ತರ ನೀಡಬೇಕು” ಎಂದು ಹೇಳಿದರು.
 
ಪ್ರಕರಣದಲ್ಲಿ ಅರಣ್ಯ ಇಲಾಖೆಯ ಪಾತ್ರದ ಬಗ್ಗೆಯೇ ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
 
ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆಗಳ ಪ್ರಭಾವದಿಂದ ತನಿಖೆಯನ್ನು ಮುಕ್ತಗೊಳಿಸಬೇಕು. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
 
“ಎನ್‌ಕೌಂಟರ್‌ನಲ್ಲಿ ಮೃತಪಟ್ಟವರು ಬಡ ಕುಟುಂಬಗಳಿಗೆ ಸೇರಿದವರು. ಅವರ ಕುಟುಂಬಗಳು ಈಗ ಸಂಕಷ್ಟದಲ್ಲಿವೆ. ಸರ್ಕಾರ ಮಾನವೀಯ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರಿಗೆ ಸೂಕ್ತ ಸರ್ಕಾರಿ ನೆರವು ಮತ್ತು ಉದ್ಯೋಗದ ವ್ಯವಸ್ಥೆ ಮಾಡಬೇಕು” ಎಂದು ವಿಜಯೇಂದ್ರ ಆಗ್ರಹಿಸಿದರು.
 
ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕೂಡ ತಮ್ಮ ಧ್ವನಿ ಎತ್ತಬೇಕು ಎಂದು ಅವರು ಹೇಳಿದರು.
 
ಹನೂರು ಶೂಟೌಟ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಪ್ರಕರಣವನ್ನು ತಕ್ಷಣ ಸಿಬಿಐಗೆ ವಹಿಸಬೇಕು. ತನಿಖೆ ಪಾರದರ್ಶಕವಾಗಿ ನಡೆಯಬೇಕು ಮತ್ತು ಸತ್ಯಾಂಶವನ್ನು ರಾಜ್ಯದ ಜನರ ಮುಂದೆ ಇಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
 
ಚಿಕ್ಕಮಗಳೂರು ನಗರದಲ್ಲಿ ಟಿಪ್ಪು ಸುಲ್ತಾನ್ ಅವರ ಸುಮಾರು 40 ಕಟೌಟ್‌ಗಳನ್ನು ಹಾಕಿರುವ ಪ್ರಕರಣದ ಕುರಿತು ಕೂಡ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
 
“ಈ ರಾಜ್ಯದಲ್ಲಿ ಕಾನೂನು ಇದೆಯೇ? ಗೃಹ ಸಚಿವರು ಇದ್ದಾರೆಯೇ? ದೇಶದ್ರೋಹದಂತಹ ಕೃತ್ಯಗಳಿಗೆ ಮುಂದಾಗುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕಾನೂನು ಉಲ್ಲಂಘಿಸುವವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ತಾಕತ್ತನ್ನು ಸರ್ಕಾರ ತೋರಿಸಬೇಕು” ಎಂದು ಅವರು ಸವಾಲು ಹಾಕಿದರು.
 
ರಾಜ್ಯದ ಯಾವುದೇ ಭಾಗದಲ್ಲೂ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾನೂನು ಸುವ್ಯವಸ್ಥೆಯ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದರು.
 
“ಜನರಲ್ಲಿ, ವಿಶೇಷವಾಗಿ ಹಿಂದೂ ಸಮಾಜದಲ್ಲಿ ಸರ್ಕಾರದ ಬಗ್ಗೆ ನಂಬಿಕೆ ಮೂಡಬೇಕಾದರೆ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಂಧಿಸಿದ ಬಳಿಕ ಅವರು ಸುಲಭವಾಗಿ ಜಾಮೀನಿನ ಮೇಲೆ ಹೊರಗೆ ಬರುವಂತಾಗಬಾರದು. ಕಾನೂನು ತನ್ನ ಕೆಲಸವನ್ನು ಕಠಿಣವಾಗಿ ಮಾಡಬೇಕು” ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿ.ವೈ. ವಿಜಯೇಂದ್ರ ಸವಾಲು ಹಾಕಿದರು.
 
ಹನೂರು ಶೂಟೌಟ್ ಪ್ರಕರಣದ ಸತ್ಯಾಂಶವನ್ನು ರಾಜ್ಯ ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು, ಮರಣೋತ್ತರ ಪರೀಕ್ಷೆಯ ವರದಿಯನ್ನು ಬಿಡುಗಡೆ ಮಾಡಬೇಕು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಪ್ರಕರಣವನ್ನು ತಕ್ಷಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಜಯೇಂದ್ರ ಪುನರುಚ್ಚರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನವದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ ಸೇರಿ ಹಲವರಿಗೆ ಗಾಯ