Publish Date: Fri, 18 Apr 2025 (14:50 IST)
Updated Date: Fri, 18 Apr 2025 (14:53 IST)
ಕಲಬುರ್ಗಿ: ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ.
ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು.
ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ ಗಂಡಸಿದ್ದಾನೆಂದು ನಾನು ಕೂಡ ನೋಡುತ್ತೇನೆ ಎಂದು ಸವಾಲು ಹಾಕಿದರು. ಯಾರೂ ಹೆದರುವ ಅಗತ್ಯವಿಲ್ಲ. ಹೊಂದಾಣಿಕೆಯ ರಾಜಕಾರಣ ಮಾಡಲು ನಮ್ಮ ಕಾರ್ಯಕರ್ತರು ಪುಕ್ಕಟೆಯಾಗಿ ಬಂದಿಲ್ಲ ಎಂದು ತಿಳಿಸಿದರು.
ಚುನಾವಣೆ ಬಂದಾಗ ರಾಜಕಾರಣ ಮಾಡುವುದನ್ನು ಬಿಟ್ಟು ವರ್ಷಪೂರ್ತಿ ರಾಜಕಾರಣ ಮಾಡುವುದನ್ನು ಅಭ್ಯಾಸ ಮಾಡಿ; ಗುಲ್ಬರ್ಗ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ನಾವು ಯಾಕೆ ಗೆಲ್ಲಲು ಸಾಧ್ಯವಿಲ್ಲ ಎಂಬ ಸವಾಲನ್ನು ರಾಜ್ಯದ ಅಧ್ಯಕ್ಷನಾಗಿ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕರ್ತರ ಪ್ರೀತಿ, ವಿಶ್ವಾಸಕ್ಕೆ ಋಣಿ
ಯಾವನೇ ಬರಲಿ; ಅವನ ಶಕ್ತಿಯನ್ನು ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನಿಗೆ ಇದೆ. ಮುಖಂಡರೆಲ್ಲರೂ ದಯವಿಟ್ಟು ಒಗ್ಗಟ್ಟಾಗಿರಿ ಎಂದು ಎಚ್ಚರಿಸಿದರು. ಕಾರ್ಯಕರ್ತರ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇಂಥ ಉರಿ ಬಿಸಿಲಲ್ಲೂ ಕೂಡ ಸಾವಿರಾರು ಕಾರ್ಯಕರ್ತರು, ತಾಯಂದಿರು ದೊಡ್ಡ ಸಂಖ್ಯೆಯಲ್ಲಿ ಬಂದು ಜನಾಕ್ರೋಶ ಯಾತ್ರೆಯನ್ನು ಯಶಸ್ವಿಯಾಗಿ ಮಾಡಿದ್ದೀರಿ. ತಮ್ಮ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಎಂದು ಬಿ.ವೈ.ವಿಜಯೇಂದ್ರ ಅವರು ನುಡಿದರು.
ಗುಲ್ಬರ್ಗದಲ್ಲಿ ಯಾವನೇ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ. ನಿಮ್ಮ ವಿಜಯೇಂದ್ರ ನಿಮ್ಮ ಜೊತೆಗಿರುತ್ತಾರೆ ಎಂದು ತಿಳಿಸಿ ವಿಶ್ವಾಸ ತುಂಬಿದರು.
3 ಕಾರಣಗಳಿಗೆ ಜನಾಕ್ರೋಶ ಯಾತ್ರೆ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ರಾಮರಾಜ್ಯ ನಿರ್ಮಿಸುವ ಮಾದರಿಯಲ್ಲಿ ನೀಡಿದ ಭರವಸೆಗಳನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕುರ್ಚಿ ಮೇಲೆ ಕುಳಿತ ಬಳಿಕ ಸಂಪೂರ್ಣವಾಗಿ ಮರೆತಿದ್ದಾರೆ. ಗ್ಯಾರಂಟಿ ಪ್ರಚಾರದ ಹಿನ್ನೆಲೆಯಲ್ಲಿ ನಾವು ಕೂಡ ಲೋಕಸಭಾ ಚುನಾವಣೆಯಲ್ಲಿ ಆತಂಕಕ್ಕೆ ಈಡಾಗಿದ್ದೆವು. ಮತದಾರರು ಬೂತ್ನಲ್ಲಿ ಮತ ಹಾಕುವ ಒಂದೆರಡು ದಿನಗಳ ಮೊದಲು ಗ್ಯಾರಂಟಿ ಹಣ ಹಾಕಿದ್ದರು ಎಂದರು.
ಜನರನ್ನು ಭಿಕ್ಷುಕರ ರೀತಿ ನೋಡುವ ಮುಖ್ಯಮಂತ್ರಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನರನ್ನು ಭಿಕ್ಷುಕರ ರೀತಿ ನೋಡುತ್ತಿದ್ದಾರೆ. ಒಂದೆಡೆ ಮಹಿಳೆಯರಿಗೆ ಪುಕ್ಕಟೆ ಪ್ರಯಾಣ ಎನ್ನುತ್ತಾರೆ. ಇನ್ನೊಂದೆಡೆ ಗ್ರಾಮೀಣ ಭಾಗದ ಸಾವಿರಾರು ಬಸ್ ಓಡಾಟವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ಇದರ ಪರಿಣಾಮವಾಗಿ ಶಾಲಾ, ಕಾಲೇಜಿಗೆ ತೆರಳುವ ಗ್ರಾಮೀಣ ಭಾಗದ ರೈತರ, ಬಡವರ ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೆಎಸ್ಆರ್ಟಿಸಿಗೆ 6,500 ಕೋಟಿ ಹಣವನ್ನು ಸರಕಾರ ಕೊಡಬೇಕಾಗಿದೆ. ಸರಕಾರಕ್ಕೆ ದುಡ್ಡು ಕೊಡಲು ಆಗುತ್ತಿಲ್ಲ. ವಿದ್ಯುತ್ ದರ ಯೂನಿಟ್ಗೆ 36 ಪೈಸೆ ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆಯವರು ಗುಲ್ಬರ್ಗದಲ್ಲಿ ಯುವಕರಿಗೆ ನೌಕರಿ ಕೊಡುವುದಾಗಿ ಹೇಳಿ ಸರಕಾರಿ ದುಡ್ಡು, 4 ಕೋಟಿ ಖರ್ಚು ಮಾಡಿ, 1 ಲಕ್ಷ ಯುವಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ, ಖಾಸಗಿ ಸಂಸ್ಥೆಗಳಲ್ಲಿ 1200 ಉದ್ಯೋಗ ನೀಡಿದ್ದಾರೆ. 1200 ಜನರಿಗೆ ಉದ್ಯೋಗ ಕೊಡಲು 4 ಕೋಟಿ ಖರ್ಚು ಮಾಡಿದ್ದಾರೆ. ಇದು ರಾಜ್ಯ ಸರಕಾರದ ಕಾರ್ಯವೈಖರಿ ಎಂದು ಶ್ರೀರಾಮುಲು ಅವರ ಮಾತನ್ನು ಉಲ್ಲೇಖಿಸಿ ವಿವರಿಸಿದರು.