ಬೆಂಗಳೂರು: ಸರ್ಕಾರಿ ನೌಕರರು ಆರ್ ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳಬಾರದು ಎಂದು ಹೇಳಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಮೊದಲು ಸಂವಿಧಾನ ಓದಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಸರ್ಕಾರದ ನೌಕರರು ಆರ್ ಎಸ್ಎಸ್ ಚಟುವಟಿಕೆಯಲ್ಲಿ ಭಾಗಿಯಾದರೆ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೆ ಈಗಾಗಲೇ ಆರ್ ಎಸ್ಎಸ್ ಚಟುವಟಿಕೆಯಲ್ಲಿ ಭಾಗಿಯಾದ ನೌಕರರನ್ನು ಸಸ್ಪೆಂಡ್ ಮಾಡಲಾಗಿದೆ.
ಈ ಬಗ್ಗೆ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಪರ್ಕ ಹೊಂದುವುದು ತಪ್ಪಲ್ಲವೆಂದು ದೇಶದ ನ್ಯಾಯಾಂಗ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸುತ್ತಲೇ ಬಂದಿದೆ.
ಸರ್ಕಾರಿ ನೌಕರರು ಆರ್ ಎಸ್ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಈ ಹಿಂದೆ ಹಲವಾರು ನ್ಯಾಯಾಲಯಗಳು ವಿವಿಧ ಪ್ರಕರಣಗಳಲ್ಲಿ ಮಹತ್ವದ ತೀರ್ಪುಗಳನ್ನು ನೀಡಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ಗುರುತಿಸಿಕೊಳ್ಳುವ ಸರ್ಕಾರಿ ನೌಕರರ ಮೇಲೆ ಕ್ರಮಕೈಗೊಳ್ಳುವ ಮೊದಲು ದೇಶದ ಸಂವಿಧಾನ, ನ್ಯಾಯಾಲಯದ ತೀರ್ಪಿನ ಕುರಿತು ಅಧ್ಯಯನ ನಡೆಸಲಿ ಎಂದಿದ್ದಾರೆ.