Publish Date: Sat, 16 Sep 2023 (11:38 IST)
Updated Date: Sat, 16 Sep 2023 (12:13 IST)
ಬೆಂಗಳೂರು : ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ಟ್ವಿಟ್ಟರ್ನಲ್ಲಿ ಚಾಟಿ ಬೀಸಿದ್ದಾರೆ.
ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳ್ಳಂ ಬೆಳಗ್ಗೆ ವರದಿ ಓದಿದ ತಕ್ಷಣ ಬಹಳ ಸಂಕಟವಾಯಿತು, ಕಣ್ಣಲ್ಲಿ ನೀರು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು.
ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯೇ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಎಂದು ಬೀಗುತ್ತಿರುವ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ `ಕರ್ನಾಟಕ ಮಾದರಿ? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯೇ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರವಾಗಿದೆ. ಇದು ನೈಜಸ್ಥಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆಗಸ್ಟ್, ಸೆಪ್ಟೆಂಬರ್ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ, ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ.