ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಗುರುವಾರ ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರ ಪ್ರಕರಣವನ್ನು ತಮಗೊಪ್ಪಿಸಿದ ನಾಲ್ಕು ದಿನಗಳ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ರವಿಯವರು ಸಾವನ್ನಪ್ಪಿ ಸರಿಯಾಗಿ ಒಂದು ತಿಂಗಳ ನಂತರ ಸಿಬಿಐ ಪ್ರಕರಣವನ್ನು ಅಧಿಕೃತವಾಗಿ ದಾಖಲಿಸಿಕೊಂಡಿದೆ.
ರಾಜ್ಯ ಸರ್ಕಾರದ ಕೋರಿಕೆ ಮತ್ತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ನಂತರ ಸಿಬಿಐ ಪ್ರಾಥಮಿಕ ತನಿಖೆಗೆ ಪ್ರಕರಣವನ್ನು ದಾಖಲಿಸಿಕೊಂಡಿದೆ. ಈ ಹಿಂದೆ ಡಿಕೆ ರವಿ ಅಸಹಜ ಸಾವಿಗೆ ಸಂಬಂಧಿಸಿದಂತೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ತನಿಖಾ ತಂಡವನ್ನು ರಚಿಸಲಾಗುತ್ತದೆ. ಆ ತಂಡ 2009 ಬ್ಯಾಚ್ ಐಎಎಸ್ ಅಧಿಕಾರಿ ಸಾವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತದೆ, " ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.