Publish Date: Sat, 12 Oct 2024 (15:45 IST)
Updated Date: Sat, 12 Oct 2024 (15:48 IST)
ಬೆಂಗಳೂರು: ರಾಜ್ಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ಬಿಸಿ ಜೋರಾಗುತ್ತಿರುವ ಬೆನ್ನಲ್ಲೇ ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿಯನ್ನು ಫೈನಲ್ ಮಾಡುವುದಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ.
ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುವ ಒತ್ತಾಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಖಿಲ್ ಸ್ಪರ್ಧಿಸಬೇಕೆಂಬುದು 95% ನಾಯಕರು, ಮುಖಂಡರು ಅಭಿಪ್ರಾಯವಾಗಿದೆ. ಆದರೆ ನಾವು ಎಲ್ಲ ಸನ್ನಿವೇಶಗಳ ಬಗ್ಗೆ ತಿಳಿದು ನಿರ್ಧಾರವನ್ನು ಕೈಗೊಳ್ಳುತ್ತೇವೆ. ಚನ್ನಪಟ್ಟಣದಲ್ಲಿ ನನಗೆ ಎನ್ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್ಡಿಎ ಅಭ್ಯರ್ಥಿ ಗೆಲುವು ಮುಖ್ಯ ಎಂದರು.
ಆದ್ದರಿಂದ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.