Publish Date: Thu, 23 Mar 2023 (17:40 IST)
Updated Date: Thu, 23 Mar 2023 (17:37 IST)
ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳರೂ ಕ್ರಾಸ್ನ ಆದಿಚುಂಚನಗಿರಿ ಆಸ್ಪತ್ರೆಯಲ್ಕಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳಿಂದ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ದಿಡೀರ್ ಅರೋಗ್ಯ ಸ್ಥಿತಿಯಲ್ಲಿ ಏರು ಪೇರು ಆಗಿದ್ದು, ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನ ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು. 1970ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ.