Publish Date: Fri, 18 Jul 2025 (20:11 IST)
Updated Date: Fri, 18 Jul 2025 (20:15 IST)
ಚಿಕ್ಕಮಗಳೂರು: ಕ್ವಾಟ್ರಸ್ ನಲ್ಲೆ ಹೆಡ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಶುಕ್ರವಾರ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದವರನ್ನು ಕಾಂತರಾಜ್ (45) ಎಂದು ಗುರುತಿಸಲಾಗಿದೆ.
ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ನಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡ ಅವರಿಗೆ ಕೃತಕ ಕಾಲು ಜೋಡಣೆ ಮಾಡಲಾಗಿತ್ತು. ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ.
ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂತರಾಜ್ ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.