Publish Date: Fri, 01 Apr 2022 (12:02 IST)
Updated Date: Fri, 01 Apr 2022 (12:03 IST)
ಮಂಡ್ಯ : ಬಾಲ್ಯ ವಿವಾಹ ನಿಷೇಧ ಎಂದು ತಿಳಿದಿದ್ದರೂ ಸಹ ಪೋಷಕರು 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಾರೆ.
ಇದು ತಿಳಿದರೆ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತೆ ಎಂದು ಬಾಲಕಿಯ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
ಮಾರ್ಚ್ 27 ರಂದು ಎಸ್ಎಸ್ಎಲ್ಸಿ ಬಾಲಕಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಕೆಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಈ ವಿಷಯವನ್ನು ಸಾರ್ವಜನಿಕವಾಗಿ ತಿಳಿಸಿರಲಿಲ್ಲ. ಆದರೆ 28 ರಂದು ಎಸ್ಎಸ್ಎಲ್ಸಿ ಇದ್ದ ಕಾರಣ ಪೋಷಕರು ಬಾಲಕಿಯ ತಾಳಿ, ಕಾಲುಂಗುರ ಬಿಚ್ಚಿಸಿಕೊಂಡು ಪರೀಕ್ಷೆ ಬರೆಯಲು ಕಳುಹಿಸಿದ್ದರು.
ಪರೀಕ್ಷೆ ಬರೆಯಲು ಹೋದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಾಳೆ. ಮಾಹಿತಿ ಬಹಿರಂಗಗೊಂಡ ಬಳಿಕ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಸ್ತುತ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿ ಇದ್ದಾಳೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರನ್ನು ನೀಡಿದ್ದಾರೆ.