Publish Date: Sun, 09 Jan 2022 (15:55 IST)
Updated Date: Sun, 09 Jan 2022 (15:15 IST)
toಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.
ಕಾಂಗ್ರೆಸ್ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ರೇಸ್ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಬೊಮ್ಮಾಯಿ ಅವರೊಂದಿಗೆ ಸಚಿವರಾದ ಅರಗ ಜ್ಞಾನೇಂದ್ರ, ಸುಧಾಕರ್, ಭೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಸಚಿವರ ಜೊತೆ ಸಭೆ ನಡೆಸಿದರು. ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.
ಒಂದು ಕಡೆ ಹೆಚ್ಚುತ್ತಿರುವ ಕೋವಿಡ್ ಸೋಂಕು ತಡೆಗಟ್ಟಲು ಸರ್ಕಾರ ವೀಕೆಂಡ್ ಕಫ್ರ್ಯೂ ಜಾರಿಗೊಳಿಸಿರುವುದು ಮತ್ತೊಂದು ಕಡೆ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವುದರಿಂದ ಸರ್ಕಾರ ಗೊಂದಲಕ್ಕೆ ಸಿಲುಕಿದೆ.ಸಣ್ಣಪುಟ್ಟ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ದಂಡ ಹಾಕಲಾಗುತ್ತದೆ. ಆದರೆ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸೇರಿರುವ ಜನಸ್ತೋಮ, ಮಾಸ್ಕ್ ಹಾಕದಿರುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸ್ಯಾನಿಟೈಸ್ ಬಳಕೆ ಮಾಡದಿರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.