Publish Date: Thu, 19 Jul 2018 (20:30 IST)
Updated Date: Thu, 19 Jul 2018 (20:35 IST)
ಕುಶಾಲನಗರ ಸಮೀಪದ ಹಾರಂಗಿ ಅಣೆಕಟ್ಟೆಗೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗಮಿಸಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಾಡಿನ ಸಮೃದ್ಧಿಗಾಗಿ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ರೆವಣ್ಣನವರು ಸಿಎಂ ಗೆ ಸಾಥ್ ನೀಡಿದರು.
ಕೊಡಗಿನಲ್ಲಿ ವರ್ಷಧಾರೆಗೆ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಸಮೇತ ಜಲಾಶಯಕ್ಕೆ ಆಗಮಿಸಿ ಬಾಗಿನ ಅರ್ಪಿಸಿದರು. ಇದಕ್ಕೂ ಮುನ್ನ, ಜಲಾಶಯದ ಮುಂಭಾಗದ ಕಾವೇರಿ ಪ್ರತಿಮೆಗೆ ಮುಖ್ಯಮಂತ್ರಿ ಪೂಜೆ ಸಲ್ಲಿಸಿದರು.
ಕೊಡಗಿನ ಸಂಪ್ರದಾಯದಂತೆ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲಾಯಿತು. ಈ ಸಂದರ್ಭ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ರೆವಣ್ಣ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಸಚಿವ ಸಾ.ರಾ. ಮಹೇಶ್, ಪಿರಿಯಾಪಟ್ಟಣ ತಾಲ್ಲೂಕು ಶಾಸಕ ಮಹಾದೇವ್, ಅರಕಲಗೂಡು ತಾಲ್ಲೂಕು ಶಾಸಕ ಎ.ಟಿ. ರಾಮಸ್ವಾಮಿ ಇದ್ದರು.