Publish Date: Sat, 20 Aug 2022 (17:40 IST)
Updated Date: Sat, 20 Aug 2022 (17:42 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ಶಿಗ್ಗಾಂವ್ಗೆ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ಬೊಮ್ಮಾಯಿ ನೆರವೇರಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.