ನಾನು ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಿಂದುಳಿದ ವರ್ಗದವನು ಮುಖ್ಯಮಂತ್ರಿಯಾಗಿರುವುದು ಅವರಿಗೆ ಸಹಿಸದಾಗಿದೆ. ಹೊಟ್ಟೆಕಿಚ್ಚಿಂದ ಕುಮಾರಸ್ವಾಮಿ ವಾಚ್ ವಿಷಯವನ್ನಿಟ್ಟುಕೊಂಡು ನನ್ನ ಬೆನ್ನು ಬಿದ್ದಿದ್ದಾರೆ. ಈ ಹಿಂದೆ ವೀರಪ್ಪ ಮೊಯ್ಲಿ, ಬಂಗಾರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಕೂಡ ಹೀಗೆ ಮಾಡಲಾಗಿತ್ತು. ಕುಮಾರಸ್ವಾಮಿ ಆರೋಪಗಳು ದುರುದ್ದೇಶಪೂರಿತವಾಗಿವೆ ಎಂದು ಸಿಎಂ ಕಿಡಿಕಾರಿದ್ದಾರೆ.
ನೀವು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುತ್ತಿರಂತೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು. ನಾನು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಲ್ಲ. ಯಾರಾದರೂ ಊಟದ ತಟ್ಟೆಯನ್ನು ಬ್ಯಾಗ್ನಲ್ಲಿ ಇಟ್ಟುಕೊಂಡು ಓಡಾಡುತ್ತಾರೆ ಏನ್ರೀ ಎಂದು ಪ್ರಶ್ನಿಸಿದರು.
ನನಗೆ ಕಳಂಕ ತರಲು, ಚಾರಿತ್ರ್ಯವಧೆ ಮಾಡಲು ನಿಂತಿದ್ದಾರೆ ಕುಮಾರಸ್ವಾಮಿ. ಅವರ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.