Publish Date: Sat, 27 Nov 2021 (18:01 IST)
Updated Date: Sat, 27 Nov 2021 (17:25 IST)
ವಿಶ್ವದ ನಾನಾ ಭಾಗಗಳಲ್ಲಿ ಹೊಸ ತಳಿಯ ಓಮಿಕ್ರಾನ್ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆ, ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ.ಚಾಮರಾಜನಗರ, ಮೈಸೂರು, ಕೊಡುಗು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನರೆನ್ಸ್ನಲ್ಲಿ ಭಾಗವಹಿಸಬೇಕೆಂದು ಬೊಮ್ಮಾಯಿ ಸೂಚನೆ ಕೊಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸಾನ, ಬಾಂಗ್ಲಾದೇಶ ಸೇರಿದಂತೆ ಮತ್ತಿತರ ಕಡೆ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಲ್ಲಲ್ಲಿ ಕಾಣಿಸಿಕೊಂಡಿದೆ. ಕೆಲವರು ಕೇರಳದಿಂದ ಇದು ಹಬ್ಬಿದೆ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಂತರ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ತಿಳಿಸಲಿದ್ದೇವೆ ಎಂದು ಹೇಳಿದರು.