ಬೆಂಗಳೂರು: ಗ್ಯಾಸ್ ಸಬ್ಸಿಡಿ ತೆಗೆದು ಪ್ರಧಾನಿ ಮೋದಿ ಬಡವರ ವಿರೋಧಿಯಾಗಿದ್ದಾರೆ. ಬಿಜೆಪಿಯವರು ಯಾವ ನೈತಿಕತೆ ಇಟ್ಟುಕೊಂಡು ನಾವು ಬೆಲೆ ಏರಿಸಿದ್ದೇವೆ ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕೂ ಬಿಜೆಪಿಯವರಿಗಿಲ್ಲ ಎಂದಿದ್ದಾರೆ.
ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಸಿ.ಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಯಾವ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದಿದ್ದಾರೆ.
RSS ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ RSS ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ. RSS ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಸಜ್ಜಾಗಿ ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಕರೆ ನೀಡಿದ್ದಾರೆ. ಆರ್ ಎಸ್ಎಸ್ ಎನ್ನುವುದು ಸುಳ್ಳಿನ ಕಾರ್ಖಾನೆ ಇದ್ದಂತೆ.
ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ
ಸುಳ್ಳೇ ಬಿಜೆಪಿಯ ಮನೆ ದೇವರು. RSS ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು.
ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?
ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.