Publish Date: Sun, 18 Aug 2024 (14:10 IST)
Updated Date: Sun, 18 Aug 2024 (14:13 IST)
ಬೆಂಗಳೂರು: ಮುಡಾ ನಿವೇಶನ ಹಗರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ತನಿಖೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದು ಮುಖ್ಯಮಂತ್ರಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.
ಈ ಎಲ್ಲ ಬೆಳವಣಿಗೆ ಮಧ್ಯೆ ಸಿದ್ದರಾಮಯ್ಯ ಅವರು ಸೋಮವಾರ ಮಂತ್ರಾಲಯಕ್ಕೆ ಭೇಟಿ ನೀಡಲಿದ್ದಾರೆ. 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಅವರು ರಾಯರ ದರ್ಶನ ಮಾಡಲಿದ್ದಾರೆ.
ಬೆಳಗ್ಗೆ 11.20 ಕ್ಕೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ತೆರಳುವ ಅವರು, ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಸಾಗುವರು. ಬಳಿಕ ರಾಯರ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮತ್ತೊಂಡೆದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.