Publish Date: Tue, 10 Mar 2026 (17:22 IST)
Updated Date: Tue, 10 Mar 2026 (17:24 IST)
ಬೆಂಗಳೂರು: ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಪೂರೈಕೆ ಸ್ಥಗಿತಗೊಂಡ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಬೆಂಗಳೂರು ಮಹಾನಗರದಲ್ಲಿ ಹೋಟೆಲ್, ರೆಸ್ಟೋರೆಂಟ್, ಕೆಟರಿಂಗ್ಗಳಿಗೆ ತೊಂದರೆಯಾಗುತ್ತಿದೆ ಎಂದರು.
ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುವ ಎಲ್ಪಿಜಿಯನ್ನು ಕೇವಲ ಗೃಹ ಬಳಕೆದಾರರಿಗೆ ಮಾತ್ರ ಮಾರಾಟ ಮಾಡಬೇಕೆಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶಿಸಿದೆ.
ದೇಶದ ಪ್ರತಿ ಮನೆಗಳಿಗೆ ಅಡೆತಡೆಯಿಲ್ಲದೆ ಅಡುಗೆ ಅನಿಲ ಪೂರೈಕೆ ಮಾಡಬೇಕೆಂಬುದು ಈ ಆದೇಶದ ಹಿಂದಿನ ಉದ್ದೇಶವಾದರೂ, ಇದರ ಅನುಷ್ಠಾನದಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಕೊರತೆಯಾಗಿದೆ ಎಂದು ಅವರು ಪತ್ರದಲ್ಲಿ ವಿವರಣೆ ನೀಡಿದ್ದಾರೆ.
ಇನ್ನೂ ಹೊಟೇಲ್ ಹಾಗೂ ರೆಸ್ಟೋರೆಂಟ್ ಸಂಘಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಿದೆ. ಎಂದು ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳು ವರದಿ ಮಾಡಿವೆ. ಸಿಲಿಂಡರ್ ಪೂರೈಕೆ ಶೀಘ್ರವಾಗಿ ಪುನರಾರಂಭಗೊಳ್ಳದಿದ್ದರೆ ಅನೇಕ ಹೋಟೆಲ್ಗಳು ತಮ್ಮ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿವೆ ಎಂದರು.
ಬೆಂಗಳೂರು ನಗರದಲ್ಲಿ ಲಕ್ಷಾಂತರ ಜನರು ತಮ್ಮ ದಿನ ನಿತ್ಯದ ಆಹಾರಕ್ಕೆ ಹೋಟೆಲ್, ರೆಸ್ಟೋರೆಂಟ್, ಮೆಸ್ ಮತ್ತು ಕೆಟರಿಂಗ್ಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದೂ ಸಚಿವರ ಗಮನಕ್ಕೆ ತಂದಿದ್ದಾರೆ.
ಪ್ರತಿದಿನ ಊಟಕ್ಕಾಗಿ ಹೋಟೆಲ್ ಮತ್ತು ಮೆಸ್ ಸೌಲಭ್ಯಗಳನ್ನು ಅವಲಂಬಿಸಿರುವ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳ ಮೇಲೆಯೂ ಇದು ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಆಹಾರ ತಯಾರಿಕೆಗಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಅವಲಂಬಿಸಿರುವ ಕಲ್ಯಾಣ ಮಂಟಪಗಳು, ವಸತಿ ನಿಲಯಗಳು ಸಹ ಅನಿಶ್ಚಿತತೆಯನ್ನು ಎದುರಿಸುತ್ತಿವೆ. ವಿಶೇಷವಾಗಿ ನಿಗದಿತ ಕಾರ್ಯಕ್ರಮಗಳಿಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ಹೇಳಿದರು.