Publish Date: Wed, 18 Jan 2023 (17:52 IST)
Updated Date: Wed, 18 Jan 2023 (17:57 IST)
ನಗರದ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕೆಲ ಮತಗಟ್ಟೆಗಳಿಗೆ ಭೇಟಿ ನೀಡಿ, ಮತಗಟ್ಟೆಗಳಲ್ಲಿರಬೇಕಿರುವ ಕನಿಷ್ಟ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಟೊಪಕರಣಗಳು, ಕಾಯುವ ಕೊಠಡಿ, ಸಹಾಯ ಕೇಂದ್ರ, ಶೌಚಾಯಲ, ರ್ಯಾಂಪ್ ಸೌಲಭ್ಯವಿರಬೇಕು. ಇದೆಲ್ಲವನ್ನೂ ಸರಿಯಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಹಾಯ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮುಖ್ಯ ಆಯುಕ್ತರು ಇಂದು ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ತಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಟ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.