Publish Date: Tue, 09 Jul 2024 (13:50 IST)
Updated Date: Tue, 09 Jul 2024 (13:52 IST)
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಕಿತ್ತಾಟವೇ ನಡೆಯುತ್ತಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇದರಲ್ಲಿ ನನ್ನ ತಪ್ಪಿಲ್ಲ. ಇದು ಬಿಜೆಪಿ ಕಾಲದಲ್ಲಿ ಆಗಿದ್ದ ಸೈಟು ಹಂಚಿಕೆ. ತಪ್ಪು ಮಾಡಿರುವುದು ಮುಡಾ ಎಂದು ಸಮಜಾಯಿಷಿ ನೀಡಿದ್ದರು.
ಅಸಲಿಗೆ ಮುಡಾದವರೇ ನನಗೆ 3 ಎಕರೆ ಜಮೀನಿಗೆ ಪರಿಹಾರವಾಗಿ 62 ಕೋಟಿ ರೂ. ನೀಡಬೇಕು. ನಾನು ಸಿಎಂ ಎಂಬ ಮಾತ್ರಕ್ಕೆ ಸೈಟು ಬಿಟ್ಟುಕೊಡಕ್ಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದರು. ಆದರೆ ಈ ನಡುವೆ ನಕಲಿ ದಾಖಲೆ ಸೃಷ್ಟಿಸಿ ಸೈಟು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಮುಡಾದಿಂದ ಕೋಟ್ಯಾಂತರ ರೂಪಾಯಿ ಬೆಲೆಯ ನಿವೇಶನ ಪಡೆಯಲಾಗಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ, ಭೂ ಮಾಲಿಕ ದೇವರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ತಹಶೀಲ್ದಾರ್, ಉಪನೋಂದಣಿ ಅಧಿಕಾರಿ ಹಾಗೂ ಮುಡಾ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎನ್ನಲಾಗಿದೆ. ಪೊಲೀಸರಿಗೆ ದೂರು ನೀಡುವುದರ ಜೊತೆಗೆ ರಾಜ್ಯಪಾಲರು, ಮುಖ್ಯ ಕಾರ್ಯರ್ಶಿಗಳು, ಕಂದಾಯ ಇಲಾಖೆ ಪ್ರಧಾ ಕಾರ್ಯದರ್ಶಿಗಳಿಗೂ ದೂರು ನೀಡಲಾಗಿದೆ.