Publish Date: Sun, 28 Jan 2024 (10:25 IST)
Updated Date: Sun, 28 Jan 2024 (10:42 IST)
ಬೆಂಗಳೂರು: ಜಗದೀಶ್ ಶೆಟ್ಟರ್ ಕೇವಲ ಒಂದೇ ವರ್ಷಕ್ಕೆ ಕೈ ಕೊಟ್ಟು ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ರಾಜ್ಯ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ.
ಇನ್ನೇನು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಸಾಮಾನ್ಯ. ಆದರೆ ಜಗದೀಶ್ ಶೆಟ್ಟರ್ ಬಹಳ ವರ್ಷಗಳಿಂದ ಬಿಜೆಪಿಯಲ್ಲಿದ್ದು ಕಳೆದ ವರ್ಷವಷ್ಟೇ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಹೋಗಿದ್ದವರು. ಅಲ್ಲಿ ಎಂಎಲ್ ಸಿ ಸಿಕ್ಕರೂ ಇದೀಗ ಲೋಕಸಭೆ ಚುನಾವಣೆ ವೇಳೆ ಮರಳಿ ಬಿಜೆಪಿಗೆ ಬಂದಿದ್ದಾರೆ.
ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷಕ್ಕೆ ಬರುವವರಿದ್ದರೆ ನಿಷ್ಠರಾಗಿರಬೇಕು. ಹೀಗೆ ಬಂದು ಹಾಗೆ ಹೋಗುವವರನ್ನು ಬರಮಾಡಿಕೊಳ್ಳಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ.
ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಿಂದ ಆ ಪಕ್ಷಕ್ಕೆ ಎಷ್ಟು ಲಾಭವಾಗುತ್ತದೋ, ಬಿಡುತ್ತದೋ ಗೊತ್ತಿಲ್ಲ. ಆದರೆ ಈ ರೀತಿಯ ಪಕ್ಷಾಂತರ ಪರ್ವ ಚುನಾವಣೆ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಲಿದೆ. ವಿಧಾನಸಭೆಯಲ್ಲಿ ಸಿಕ್ಕ ಪ್ರಚಂಡ ಗೆಲುವನ್ನು ಒಂದೇ ವರ್ಷದಲ್ಲಿ ಲೋಕಸಭೆ ಚುನಾವಣೆ ವೇಳೆ ಕಳೆದುಕೊಳ್ಳಲು ಕಾಂಗ್ರೆಸ್ ತಯಾರಿಲ್ಲ.
ಹೀಗಾಗಿ ಲೋಕಸಭೆ ಚುನಾವಣೆ ಗೆಲ್ಲುವುದು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಪಕ್ಷಕ್ಕೆ ಯಾರನ್ನೇ ಕರೆತರುವುದಿದ್ದರೂ ಇಲ್ಲಿನ ಸಿದ್ಧಾಂತ ಒಪ್ಪಿ ಪಕ್ಷಕ್ಕಾಗಿ ಕೆಲಸ ಮಾಡುವವರಿಗಷ್ಟೇ ಸ್ವಾಗತ ಎಂದು ಬೋರ್ಡ್ ಹಾಕಿ ಕುಳಿತಿದೆ.