Publish Date: Tue, 16 Dec 2025 (09:45 IST)
Updated Date: Tue, 16 Dec 2025 (09:48 IST)
ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಿದ್ದು, ಡಿಕೆಶಿ ಬಣದ ನಡುವೆ ಶತಪ್ರಯತ್ನಗಳು ನಡೆಯುತ್ತಿವೆ. ಇದರ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಸ್ಪಷ್ಟ ಸಂದೇಶವನ್ನು ರವಾನಿಸಿದೆ.
ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಎಲ್ಲವೂ ಸರಿಯಾಗಿದೆ ಎಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಾರಿದರೂ ಒಳಗೊಳಗೇ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಗುಟ್ಟಾಗೇನೂ ಉಳಿದಿಲ್ಲ. ಇದರ ನಡುವೆ ಎರಡೂ ಬಣದ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ.
ಮೊನ್ನೆಯಷ್ಟೇ ವೋಟ್ ಚೋರಿ ನೆಪದಲ್ಲಿ ದೆಹಲಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಏನು ಭರವಸೆ ನೀಡಿದ್ದರು ಎಂಬುದನ್ನು ಅವರು ಬಹಿರಂಗಪಡಿಸಲು ನಿರಾಕರಿಸಿದ್ದರು.
ಆದರೆ ಮೂಲಗಳ ಪ್ರಕಾರ ಅಧಿಕಾರ ಹಂಚಿಕೆ ಬಗ್ಗೆ ಬಣ ರಾಜಕೀಯ ಮಾಡುತ್ತಿರುವವರಿಗೆ ಹೈಕಮಾಂಡ್ ನಾಯಕರು ಕಾಯುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಈಗ ರಾಹುಲ್ ಗಾಂಧಿ ಕೂಡಾ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಈಗ ತರಾತುರಿಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದೆ.