ವಿಜಯಪುರ: ಪ್ರಚೋದನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮತ್ತೊಂದು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.
ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ಅವರಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಸೊರಕೆ ಮಾಡಿದ್ದಾರೆ.
ಕರಾವಳಿ ಭಾಗದಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ ಅವರು ಯಾಕೆ ಇರಲಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ಶೀಘ್ರ ವಾಸ್ತವಾಂಶ ಹೊರಬರಲಿದೆ ಎಂದು ಹೇಳಿದರು.