Publish Date: Mon, 09 Feb 2026 (09:55 IST)
Updated Date: Mon, 09 Feb 2026 (09:57 IST)
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ ಈಗ ಯತೀಂದ್ರ ಸಿದ್ದರಾಮಯ್ಯ ಎಲ್ಲಾ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಿರುವುದು ಪಕ್ಷದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮೊನ್ನೆಯಷ್ಟೇ ಯತೀಂದ್ರ ಸಿದ್ದರಾಮಯ್ಯ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡಿದ್ದರು. ಇದು ರಾಜ್ಯದಲ್ಲಿ ಮತ್ತೆ ನಾಯಕತ್ವ ವಿಚಾರ ಚರ್ಚೆಯಾಗುವಂತೆ ಮಾಡಿತ್ತು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರೇ ಹೈಕಮಾಂಡ್, ಅವರು ಹೇಳಿದಂತೆ ಕೇಳೋಣ ಎಂದು ಟಾಂಗ್ ಕೊಟ್ಟಿದ್ದರು.
ಇದಕ್ಕೆ ಮೊದಲು ಕೆಜೆ ಜಾರ್ಜ್ ತಮ್ಮ ಇಲಾಖೆಯಲ್ಲಿನ ಅಧಿಕಾರಿಗಳನ್ನು ಯತೀಂದ್ರ ಅಣತಿ ಮೇರೆಗೆ ವರ್ಗಾವಣೆ ಮಾಡಿದ್ದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸುದ್ದಿಗಳಿತ್ತು. ಇದೀಗ ಶಾಸಕ ತನ್ವೀರ್ ಸೇಠ್ ಕೂಡಾ ಯತೀಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಗೃಹಸಚಿವ ಪರಮೇಶ್ವರ್ ಮುಂದೆಯೇ ಅಸಮಾಧಾನ ಹೊರಹಾಕಿದ್ದಾರೆ. ಅಧಿಕಾರಿಗಳು ನಮ್ಮ ಮಾತು ಕೇಳ್ತಿಲ್ಲ ಎಂದು ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇನ್ನು ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಈಗಾಗಲೇ ಯತೀಂದ್ರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಿಎಂ ಪುತ್ರ ಎನ್ನುವ ಕಾರಣಕ್ಕೆ ಎಲ್ಲಾ ವಿಚಾರದಲ್ಲೂ ಅವರೇ ತಲೆಹಾಕುವುದು ಶಾಸಕರ ಅಸಮಾಧಾನಕ್ಕೆ ಗುರಿಯಾಗಿದೆ.