Publish Date: Sat, 06 Jul 2024 (14:40 IST)
Updated Date: Sat, 06 Jul 2024 (14:43 IST)
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಭಾಗಿಯಾದವರು ಹಾರ್ಟ್ ಅಟ್ಯಾಕ್ ಆಗಿ ಸಾಯಲಿ ಎಂದು ಕಾಂಗ್ರೆಸ್ ಪಕ್ಷದವರೇ ಆದ ಶಾಸಕ ಕೊತ್ತೂರು ಮಂಜುನಾಥ್ ಶಾಪ ಹಾಕಿದ್ದಾರೆ.
ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಶಾಸಕ ನಾಗೇಂದ್ರ ಹೆಸರು ಕೇಳಿಬಂದಿದೆ. ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರಕ್ಕೆ ಈ ಪ್ರಕರಣ ಮುಜುಗರವಾಗಿದೆ. ವಿಪಕ್ಷ ಬಿಜೆಪಿ ಈಗಾಗಲೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಇದರ ನಡುವೆ ಕಾಂಗ್ರೆಸ್ ಶಾಸಕ ಮಂಜುನಾಥ್ ವಾಲ್ಮೀಕಿ ಹಗರಣದ ರೂವಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಅಷ್ಟೇ ಅಲ್ಲ, ಹಗರಣದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು, ಸಿಐಡಿ ತನಿಖೆ ಸರಿಯಾಗಿ ಆಗುತ್ತಿಲ್ಲ. ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನು ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ವಾಲ್ಮೀಕಿ ಹಗರಣದಂತೇ ಈ ಪ್ರಕರಣದ ತನಿಖೆಯೂ ಸರಿಯಾಗಿ ನಡೆಯಲಿ. ಸತ್ಯಾಂಶ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಮಂಜುನಾಥ್ ಹೇಳಿದ್ದಾರೆ. ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.