ಬೆಂಗಳೂರು: ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತೆ ಸಂಕಷ್ಟ ಎದುರಾಗಿದೆ. ಸೈಲ್ ಅವರು ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿದೆ.
ಶಾಸಕ ಸೈಲ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣದ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶುಕ್ರವಾರ ವಿಚಾರಣೆ ನಡೆಸಿದರು. ಸಾಕ್ಷಿ ವಿಚಾರಣೆಯಲ್ಲಿ 24 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು.
ವಿಚಾರಣೆ ವೇಳೆ ಸೈಲ್ ಪರ ಕಿರಿಯ ವಕೀಲರು, ಅರ್ಜಿದಾರರ ಪರ ಹಿರಿಯ ವಕೀಲರು ಮತ್ತು ಅರ್ಜಿದಾರರು ಧಾರವಾಡಕ್ಕೆ ತೆರಳಿರುವ ಕಾರಣದಿಂದ ಗೈರಾಗಿದ್ದಾರೆ. ಆದ್ದರಿಂದ ವಿನಾಯತಿ ನೀಡಬೇಕು ಎಂದು ಕೋರಿದರು.
ಇದು 11 ವರ್ಷಗಳ ಹಿಂದಿನ ಪ್ರಕರಣ. ನ್ಯಾಯಾಲಯ ಈ ಹಿಂದಿನ ಸಂದರ್ಭಗಳಲ್ಲಿ ಅರ್ಜಿದಾರರ ಗೈರು ಹಾಜರಿಗೆ ವಿನಾಯತಿ ನೀಡಿತ್ತು. ಆದಾಗ್ಯೂ, ನ್ಯಾಯಾಲಯ ಪಾಟಿ ಸವಾಲು ನಡೆಸುತ್ತಿರುವ ಈ ಸಂದರ್ಭದಲ್ಲಿ, ವಿಚಾರಣೆ ವಿಳಂಬಗೊಳಿಸಲು ವಕೀಲರು ಮುಂದೂಡಿಕೆಯ ಮನವಿ ಮಾಡಿದ್ದಾರೆ ಎಂದು ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.
ಹಾಲಿ ಮತ್ತು ಮಾಜಿ ಸಂಸದರು- ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಸ್ಥಾಪಿಸಿದ ವಿಶೇಷ ನ್ಯಾಯಾಲಯ ಇದಾಗಿದೆ. ಹಾಲಿ ಪ್ರಕರಣದಲ್ಲಿ ಸಾಕ್ಷಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಎಲ್ಲಾ ಆರೋಪಿಗಳೂ ಹಾಜರಿರುವಾಗ ಮೊದಲ ಆರೋಪಿಯಾದ ಇವರೊಬ್ಬರ ಗೈರನ್ನು ಮನ್ನಿಸಲಾಗದು. ಹಾಗಾಗಿ, ಸತೀಶ್ ಸೈಲ್ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ ಜಾರಿ ನಿರ್ದೇಶನಾಯ ದಾಖಲಿಸಿರುವ ಮತ್ತೊಂದು ಪ್ರಕರಣದಲ್ಲಿ ವೈದ್ಯಕೀಯ ಚಿಕಿತ್ಸೆ ಆಧಾರದಡಿ ಮಧ್ಯಂತರ ಜಾಮೀನು ಪಡೆದು ಹೊರಗಿರುವ ಸತೀಶ್ ಸೈಲ್ ಅವರ ಜಾಮೀನು ಅರ್ಜಿಯನ್ನೂ ನ್ಯಾಯಾಧೀಶರು ವಜಾಗೊಳಿಸಿ ಆದೇಶಿಸಿದರು.