Publish Date: Thu, 15 Dec 2022 (21:46 IST)
Updated Date: Thu, 15 Dec 2022 (21:51 IST)
ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಭೂಮಿಪೂಜೆ ನೆರವೇರಿಸಿದರು. ಯಲಹಂಕ ವಿಧಾನಸಭಾ ಕ್ಷೇತ್ರದ 17 ಗ್ರಾಮಗಳ 3546 ಎಕರೆ ಪ್ರದೇಶದಲ್ಲಿ ಸುಮಾರು 22 ಸಾವಿರ ನಿವೇಶನಗಳನ್ನು ನಿರ್ಮಾಣ ಮಾಡಿ ರೈತರು ಮತ್ತು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಗುರಿಯೊಂದಿಗೆ ರಾಜ್ಯ ಸರ್ಕಾರ ಮತ್ತು ಬಿಡಿಎದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆತಂತಾಗಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ವಿಶ್ವನಾಥ್ ಅವರು, ಈ ಹಿಂದಿನ ಬಡಾವಣೆಗಳಂತೆ ಇದು ಸಹ ಆಗುತ್ತದೆ ಎನ್ನುವ ಆತಂಕ ಇತ್ತು. ಆದರೆ, ಸುಪ್ರಿಂ ಕೋರ್ಟ್ ಸಮಿತಿಯೊಂದನ್ನು ರಚಿಸಿ ಬಡಾವಣೆ ನಿರ್ಮಿಸಲು ಅನುಮತಿ ನೀಡಿದೆ ಎಂದರು. ರೈತರು ತಮಗೆ ಹಣದ ರೂಪದಲ್ಲಿ ಅಥವಾ 60:40 ಅನುಪಾತದಲ್ಲಿ ಅಭಿವೃದ್ಧಿ ಪಡಿಸಿದ ನಿವೇಶನಗಳನ್ನು ಪಡೆಯಬಹುದಾಗಿದೆ. ಯಾವುದೇ ಸಮಸ್ಯೆಗಳಿದ್ದರೂ ಬಿಡಿಎ ಜೊತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ರೈತರಿಗೆ ಮನವಿ ಮಾಡಿದ ಅವರು, ಈ ವಿಚಾರದಲ್ಲಿ ರೈತರೊಂದಿಗೆ ನಾನು ಕೈಜೋಡಿಸುತ್ತೇನೆ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.