ಬೆಂಗಳೂರು: ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಸಚಿವ ವಿಜಯ್ ಶಾ ವಿರುದ್ಧ ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳು ಎಫ್ಐಆರ್ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸೋಫಿಯಾ ಖುರೇಷಿ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ.
ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗುವುದು. ನಂತರ ಇದರ ಬಗ್ಗೆ ಕೇಂದ್ರಕ್ಕೆ ತಿಳಿಸಿ, ಅವರ ಮೇಲೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡುವಂತೆ ಕೋರಲಾಗುವುದು ಎಂದರು.
ಬಿಜೆಪಿ ಸಚಿವರ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೇ ಅವಮಾನದಂತೆ ಅಲ್ಲ, ಇಡೀ ದೇಶಕ್ಕಾದ ಅವಮಾನ. ಇಂತಹ ಕೀಳು ಮನಃಸ್ಥಿತಿ ಯಾರಿಗೂ ಇರಬಾರದು ಎಂದು ಬೇಸರ ವ್ಯಕ್ತಪಡಿಸಿದರು.