Publish Date: Wed, 05 Jan 2022 (15:04 IST)
Updated Date: Wed, 05 Jan 2022 (15:44 IST)
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಎಂಟಿಸಿ ಬಸ್ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಬಿಎಂಟಿಸಿ ಬಸ್ಗಳಲ್ಲಿ ಎಷ್ಟು ಆಸನಗಳಿವೆಯೋ ಅಷ್ಟೇ ಜನರ ಪ್ರಯಾಣಕ್ಕೆ ಮಾತ್ರ ಅವಕಾಶವನ್ನು ನೀಡಬೇಕು.