ಬೆಂಗಳೂರು: ಕೊವಿಡ್ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಏನೇನು ತೀರ್ಮಾನವಾಗಿದೆ ಇಲ್ಲಿದೆ ನೋಡಿ ವಿವರ.
ಇಂದಿನ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ನಿಯಮಿತವಾಗಿ ತಮಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ. ಪ್ರತೀ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.
ಶಾಲೆ ಕಾಲೇಜಿಗೆ ರಜೆ ಇರುತ್ತಾ?
ಕೊವಿಡ್ ಹರಡುತ್ತಿದ್ದಂತೇ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತಾ ಎಂದು ಬಹುತೇಕ ಪೋಷಕರು, ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿತ್ತು. ಆದರೆ ಸದ್ಯಕ್ಕೆ ಶಾಲೆ, ಕಾಲೇಜು ನಡೆಯಲಿದೆ. ಆದರೆ ನೆಗಡಿ, ಕೆಮ್ಮು ಇತ್ಯಾದಿ ಆರೋಗ್ಯ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಆಕ್ಸಿಜೆನ್, ವೆಂಟಿಲೇಟರ್ ಎಲ್ಲವನ್ನೂ ಸಿದ್ಧವಾಗಿರಿಸಿಕೊಳ್ಳಲು ಸೂಚಿಸಲಾಗಿದೆ. ಬಾಣಂತಿ, ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ರಾಜ್ಯದಲ್ಲಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಮುಂದಿನ ದಿನಗಳಲ್ಲಿ ಅವಶ್ಯಕತೆ ಬಂದಲ್ಲಿ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಕೇಂದ್ರ ಸ್ಥಾಪಿಸಬೇಕು. ಆರೋಗ್ಯ ಸಿಬ್ಬಂದಿ ರಜೆ ಹಾಕದೇ ಕರ್ತವ್ಯಕ್ಕೆ ಹಾಜರಿರಬೇಕು.