Publish Date: Mon, 11 Oct 2021 (09:18 IST)
Updated Date: Sun, 10 Oct 2021 (23:20 IST)
ಮೈಸೂರು : ಕೊರೊನಾ ಮಹಾಮಾರಿಯ ಭೀತಿಯ ನಡುವೆ ನಡೆಯುತ್ತಿರುವ ಸರಳ ದಸರಾ ದಿನೇದಿನೇ ಕಳೆಗಟ್ಟುತ್ತದೆ. ಮೈಸೂರು ಅರಮನೆಯ ಅಂಗಳದಲ್ಲಿ ನಡೆದ ಹಂಸಲೇಖ ಸಂಗೀತ ಕಾರ್ಯಕ್ರಮ ಎಲ್ಲರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.
ತಣ್ಣನೆಯ ತಿಳಿಗಾಳಿ, ಅಲ್ಲಲ್ಲಿ ವರುಣನ ಸಿಂಚನ, ಝಗಮಗಿಸುವ ದೀಪಗಳ ನಡುವೆ ಹೊಂಬೆಳಕಿನಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆ. ಅರಮನೆ ಆವರಣದಲ್ಲಿ ಸುಶ್ರಾವ್ಯ, ಸುಮಧುರ ಹಾಡು. ಹೌದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂಯೋಜಿಸಿದ ಸಂಗೀತದ ಅಲೆಗಳು ಸಂಗೀತ ರಸಿಕರ ಮನತಣಿಸುವಲ್ಲಿ ಯಶಸ್ವಿಯಾಯ್ತು.
ಮೊದಲಿಗೆ ರಾಜ ಮಹಾರಾಜ ಜನಗಳ ರಾಜ ಎಂದು ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರನ್ನು ಸ್ಮರಿಸುತ್ತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಂಡವು, ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ಹಾಡುತ್ತಾ ಅರಮನೆ ಅಂಗಳದಲ್ಲಿ ಸುಮಧುರ ಗೀತೆಗಳ ಸುರಿಮಳೆಯನ್ನೇ ಸುರಿಸಿದರು.
ಗಾಯಕಿ ಪೃಥ್ವಿ ಅವರ ಸುಮಧುರ ಧ್ವನಿಯಲ್ಲಿ ಮೂಡಿಬಂದ ಓ ನನ್ನ ಚೇತನ ಆಗು ನೀ ಅನಿಕೇತನ, ಶ್ರೀ ಚಾಮುಂಡೇಶ್ವರಿ ಕುರಿತಾದ ಶ್ರೀ ಚಾಮುಂಡಿ ಮಹಾಮಾಯಾ, ಗಾಯಕ ನಿತಿನ್ ರಾಜಾರಾಮ್ ಶಾಸ್ತ್ರಿ ಅವರ ಕಂಠಸಿರಿಯಲ್ಲಿ ಮೂಡಿಬಂದ ಓಂ ಮಹಾಪ್ರಾಣ ದೀಪಂ ಶಿವಂ ಗೀತೆಯು ವೀಕ್ಷಕರನ್ನು ಭಕ್ತಿಯ ಕಡಲಲ್ಲಿ ತೇಲಿಸಿತು.
ನಮದೊಂದೇ ಭಾರತಂ ಗೀತೆಯನ್ನು ಹಾಡಿ ಸಭಿಕರೆಲ್ಲರಲ್ಲಿ ದೇಶಭಕ್ತಿ ಮೂಡಿಸಿದರು. ನಂತರ ಸರಿಗಮಪ ಚಾಂಪಿಯನ್ ಶಿಪ್ನ ಪುಟ್ಟ ಗಾಯಕಿ ಜ್ಞಾನ ಹಾಡಿದ ಆಗೋ ಕರ್ನಾಟಕ… ಎಂಬ ಸೊಗಸಾದ ಗೀತೆಯು ಸೂಜಿಗಲ್ಲಿನ ಹಾಗೆ ಎಲ್ಲರ ಗಮನ ಸೆಳೆಯಿತು. ಗಾಯಕ ಚಿನ್ಮಯ್ ಆತ್ರೇಯಾ ಅವರು ಹಾಡಿದ ಈ ಭೂಮಿ ಬಣ್ಣದ ಬುಗುರಿ ಗೀತೆಯು ಎಲ್ಲರೂ ತಲೆದೂಗುವಂತೆ ಮಾಡಿತು. ಬಳಿಕ ನೆನಪಿರಲಿ ಚಿತ್ರದ ಕೂರಕ್ ಕುಕ್ಕರಹಳ್ಳಿ ಕೆರೆ ಗೀತೆಯು ನೆರೆದಿದ್ದ ಯುವ ಮನಸುಗಳು ಹೆಜ್ಜೆಹಾಕುವಂತೆ ಮೋಡಿ ಮಾಡಿತು.