Publish Date: Fri, 28 Dec 2018 (19:31 IST)
Updated Date: Fri, 28 Dec 2018 (19:33 IST)
ಅಧಿಕಾರಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ನಿಗದಿಪಡಿಸಿದ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಖರ್ಚು ಮಾಡದಿದ್ದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮೇಲೆ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಅನುಸಾರ ಕೇಸ್ ದಾಖಲು ಮಾಡಲಾಗುವುದು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿಪಿ, ಟಿಎಸ್ಪಿ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿ ನೀಡದವರಿಗೆ ಮತ್ತು ಸಭೆಗೆ ಗೈರುಹಾಜರಾದವರಿಗೆ ನೋಟಿಸ್ ಜಾರಿಗೊಳಿಸುವಂತೆ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೂಡಲೇ ಎಲ್ಲ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಅವಧಿಯೊಳಗೆ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ಸಲ್ಲಿಸಬೇಕು ಎಂದರು.
ಫಲಾನುಭವಿ ಆಧಾರಿತ ಯೋಜನಾ ಕಾರ್ಯಕ್ರಮಗಳನ್ನು ಜ.15ರೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಖರ್ಚು ಮಾಡಬೇಕು. ಅನುದಾನ ಲ್ಯಾಪ್ಸ್ ಆಗದೇ ಮತ್ತು ಬೇರೆಡೆ ಹೋದರೇ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.