Publish Date: Sat, 17 Aug 2024 (14:17 IST)
Updated Date: Sat, 17 Aug 2024 (14:21 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಾಜಕೀಯ ರಂಗದಲ್ಲಿ ಹುಲಿ ಎಂದೇ ಪರಿಗಣಿಸಲಾಗುತ್ತದೆ. ಈಗ ಹುಲಿ ಮೇಲೆ ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೇ ಬಂಡೆ ಎಂದೇ ಕರೆಯಿಸಿಕೊಳ್ಳುವ ಡಿಕೆ ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಹಲವು ದೂರುಗಳು ಬಂದ ಬೆನ್ನಲ್ಲೇ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಆದೇಶ ನೀಡುತ್ತಿದ್ದಂತೇ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಶುರುವಾಗಿದೆ.
ಸಿಎಂ ಬೆನ್ನಿಗೆ ನಿಂತ ಡಿಸಿಎಂ ಡಿಕೆ ಶಿವಕುಮಾರ್ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಸಚಿವ ಸಂಪುಟ, ಶಾಸಕರು ಎಲ್ಲರ ಬೆಂಬಲ ಸಿಎಂಗಿದೆ. ಈ ಪ್ರಕರಣವನ್ನು ನಾವು ಕಾನೂನು ಚೌಕಟ್ಟಿನಲ್ಲೇ ಹೋರಾಡುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ. ಮುಡಾದಿಂದ ಸಿಎಂ ಪತ್ನಿ ಪಾರ್ವತಿಗೆ ಅಕ್ರಮವಾಗಿ ಸೈಟು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಈಗ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ.