Publish Date: Thu, 31 Aug 2017 (10:35 IST)
Updated Date: Thu, 31 Aug 2017 (10:38 IST)
ಬೆಂಗಳೂರು: ಬೆಳಗಾವಿ ಗಡಿ ವಿವಾದದ ವಿಚಾರದಂತೆ ಮರಾಠಿ ಮತ್ತು ಕನ್ನಡಿಗರ ನಡುವೆ ಹಿಂದಿನಿಂದಲೂ ವಿವಾದವಿದೆ. ಆದರೆ ಈ ಗಾಯಕ್ಕೆ ಉಪ್ಪು ಸುರಿಯುವಂತಹ ಕೆಲಸವನ್ನು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿಯಲ್ಲಿ ಮಾತನಾಡುತ್ತಾ ಲಕ್ಷ್ಕೀ ಹೆಬ್ಬಾಳ್ಕರ್ ಬಹಿರಂಗವಾಗಿ ಮಹಾರಾಷ್ಟ್ರ ಪರ ಘೋಷಣೆ ಕೂಗಿದ್ದಾರೆ ಎಂದು ಸುದ್ದಿಯಾಗಿದ್ದು ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ‘ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಬಂದರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತೆ.
ಆಗ ನಾನೇ ಮೊದಲು ಮರಾಠಿ ಧ್ವಜ ಹಿಡಿಯುತ್ತೇನೆ. ನನಗೆ ಯಾರ ಭಯವೂ ಇಲ್ಲ’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಹೇಳಿದ್ದಾರೆ ಎನ್ನಲಾಗಿರುವ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಯಿಸಿರುವ ಕನ್ನಡ ನಾಡು ಹೋರಾಟಗಾರ ವಾಟಾಳ್ ನಾಗರಾಜ್, ಲಕ್ಷ್ಮೀ ಹೇಳಿಕೆ ಅಕ್ಷಮ್ಯ ಅಪರಾಧ. ಇದು ನಿಜವೇ ಆಗಿದ್ದರೆ, ತಕ್ಷಣವೇ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.