Publish Date: Tue, 27 Nov 2018 (20:07 IST)
Updated Date: Tue, 27 Nov 2018 (20:09 IST)
ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಕಡಗಂಚಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ವಿಮಾನ ನಿಲ್ದಾಣ ಹಾಗೂ ಇ.ಎಸ್.ಐ.ಸಿ. ಆಸ್ಪತ್ರೆಗಳಿಗೆ ಭೇಟಿ ನೀಡಿ ಚರ್ಚಿಸಿತು.
ಸಮಿತಿಯು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿತು. ನಂತರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳೊಂದಿಗೆ ವಿಮಾನಯಾನ ಸಂಚಾರ ಆರಂಭಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಗೆ ಭೇಟಿ ನೀಡಿ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಪ್ರಗತಿ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ಅಧಿಕಾರಿಗಳೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿತು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿಹಾರ ಸಂಸದ ಜನಾರ್ಧನ ಸಿಂಗ್ ಸಿಗ್ರಿವಾಲ್, ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶಕ ಜಯಕುಮಾರ ಟಿ., ಹೆಚ್ಚುವರಿ ನಿರ್ದೇಶಕ ಎ.ಕೆ. ಸಿಂಗ್, ಕಾರ್ಯದರ್ಶಿ ಆರ್. ನಾರಾಯಣನ್, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.