Publish Date: Tue, 12 Aug 2025 (18:14 IST)
Updated Date: Tue, 12 Aug 2025 (18:19 IST)
ಬೆಂಗಳೂರು: ಮೊನ್ನೆಯಷ್ಟೇ ಹಳದಿ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಮೋದಿ ಬಂದಿದ್ದಾಗ ವೇದಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗಣಪತಿಯ ಮೂರ್ತಿಯನ್ನು ನೀಡಿ ಸನ್ಮಾನಿಸಿದ್ದರು. ಆದರೆ ಈ ಮೂರ್ತಿಯನ್ನು ಬಿಜೆಪಿ ಶಾಸಕ ತಂದಿದ್ದು ಎಂದು ವಿವಾದವಾಗಿತ್ತು. ಈ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ವೇದಿಕೆಯಲ್ಲಿದ್ದ ಪ್ರಧಾನಿ ಮೋದಿಗೆ ಡಿಕೆಶಿ ನೀಡಿದ್ದ ಬೆಳ್ಳಿಯ ಗಣಪತಿ ಮೂರ್ತಿಯನ್ನು ಬಿಜೆಪಿ ಶಾಸಕ ಎಂ ಕೃಷ್ಣಪ್ಪ ತಂದಿದ್ದರು. ಆದರೆ ಅದನ್ನು ಡಿಕೆಶಿ ನೀಡಿದ್ದರು. ಇದರಿಂದ ಎಂ ಕೃಷ್ಣಪ್ಪ ನಿರಾಸೆಗೊಳಗಾದರು ಎಂದು ಸುದ್ದಿಯಾಗಿತ್ತು.
ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಡಿಕೆಶಿ ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ!
ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು.
ಅಂದಿನ ಸಮಾರಂಭದಲ್ಲಿ ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದಿದ್ದಾರೆ.