ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ನ ಕೆಂಗಣ್ಣಿನಿಂದ ಬಚಾವಾಗಲು ಚಾಮುಂಡಿ ದೇವಸ್ಥಾನದ ಮೇಲೆ ವಿವಾದವನ್ನು ಹುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರು ಹಿಂದೂಗಳಿಗೆ, ಹಿಂದೂ ದೇವಸ್ಥಾನಗಳಿಗೆ ಅಪಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಅಲ್ಲ ಎನ್ನಲು ಇವರ್ಯಾರಯ ಎಂದು ಪ್ರಶ್ನೆ ಮಾಡಿದರು.
ಹಿಂದೂ ಸಂಸ್ಕೃತಿ, ಹಿಂದೂಗಳು ಹಾಗೂ ಹಿಂದೂ ಪೂಜಾಸ್ಥಾನಗಳ ಮೇಲಿನ ನಿಮ್ಮ ನಿರಂತರವಾದ ಷಡ್ಯಂತ್ರಕ್ಕೆ ಶೀಘ್ರವೇ ಹಿಂದೂ ಸಮಾಜ ತಿಲಾಂಜಲಿ ಹಾಡಲಿದೆ ಎಂದು ಹೇಳಿದ್ದಾರೆ.
ಕಳೆದ ದಿನ ಹೇಳಿಕೆ ನೀಡಿದ್ದ ಶೋಭಾ, 'ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟ ಹತ್ತಬಾರದು. ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಅವರಿಗೆ ನೀಡಿರುವ ಆಹ್ವಾನವನ್ನು ಕೂಡಲೇ ವಾಪಸ್ ಪಡೆಯಬೇಕು' ಎಂದು ಆಗ್ರಹಿಸಿದ್ದರು.
ಮತ್ತೊಂದೆಡೆ ಪ್ರತಿಕ್ರಿಯೆ ನೀಡಿದ್ದ ಡಿಕೆಶಿ, 'ಚಾಮುಂಡೇಶ್ವರಿ ಎಲ್ಲ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ' ಎಂದಿದ್ದರು.
'ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ' ಎಂದು ಹೇಳಿದ್ದರು.